ADVERTISEMENT

ಮತ ಬ್ಯಾಂಕ್ ರಾಜಕಾರಣದಿಂದ ಕಾಂಗ್ರೆಸ್ ಅಸ್ತಿತ್ವಕ್ಕೆ ಪೆಟ್ಟು: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 7:09 IST
Last Updated 8 ಫೆಬ್ರುವರಿ 2022, 7:09 IST
ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ    

ನವದೆಹಲಿ: ಮತ‌ ಬ್ಯಾಂಕ್ ರಾಜಕಾರಣ ಮಾಡುವ ಮೂಲಕವೇ ದೇಶದಲ್ಲಿ ಹೇಳ‌ ಹೆಸರಿಲ್ಲದಂತಾಗಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲೂ ಅದೇ ಕೆಲಸ ಮಾಡುತ್ತಿದೆ‌. ಈ ಮೂಲಕ ಇಲ್ಲೂ ಅಡ್ರೆಸ್‌ಗೆ‌ ಇಲ್ಲದಂತಾಗಲಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಇಲ್ಲಿನ ಕರ್ನಾಟಕ ಭವನದಲ್ಲಿ ಮಂಗಳವಾರ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಥ ರಾಜಕಾರಣವು ಕಾಂಗ್ರೆಸ್ ಅಸ್ತಿತ್ವಕ್ಕೇ ಮಾರಕವಾಗಲಿದೆ ಎಂದು ಭವಿಷ್ಯ ನುಡಿದರು.

ಸೌಹಾರ್ದತೆಗೆ ಹೆಸರಾಗಿರುವ ಕರ್ನಾಟಕದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದೂ ಅವರು ದೂರಿದರು.

ADVERTISEMENT

ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಮನೆಯಲ್ಲೇ ಇರಿಸಿ, ಕೇವಲ ಶಿಕ್ಷಣದತ್ತ ಆಸಕ್ತಿ ತೋರಬೇಕಿದೆ ಎಂದು ಸಲಹೆ‌ ನೀಡಿದ ಅವರು, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳುವ ಬದಲು, ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಹೇಳಿಕೆ ನೀಡುತ್ತ ಕುಮ್ಮಕ್ಕು ನೀಡುತ್ತಿರುವುದು ಸರಿಯಲ್ಲ. ಇದರಿಂದ ಶಿಕ್ಷಣ ವ್ಯವಸ್ಥೆ ಹದಗೆಡಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕಲೆ, ಸಂಸ್ಕೃತಿ, ಸೌಹಾರ್ದತೆಗೆ ಹೆಸರಾಗಿರುವ ರಾಜ್ಯದಲ್ಲಿ ವಿದ್ಯಾರ್ಥಿಗಳು ಸಾಮರಸ್ಯದಿಂದ ಜೀವನ ಮಾಡಬೇಕೇ ವಿನಾ ಸಂಘರ್ಷದಿಂದಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಹೈಕೋರ್ಟ್ ಹಾಗೂ ಸರ್ಕಾರ ನೀಡುವ ಆದೇಶ ಪಾಲಿಸಿ ಶಾಂತಿ ಕಾಪಾಡಬೇಕು ಎಂದು ಅವರು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.