
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಪದವಿ ವ್ಯಾಸಂಗ ಕುರಿತು ನೀಡಿದ ಹೇಳಿಕೆಗಾಗಿ ದಾಖಲಾದ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಪ್ರತ್ಯೇಕವಾಗಿ ನಡೆಸುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ನಿರಾಕರಿಸಿದ್ದ ಕೆಳನ್ಯಾಯಾಲಯಗಳ ಆದೇಶವನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ ಅರವಿಂದ ಕೇಜ್ರಿವಾಲ್ ಮತ್ತು ಸಂಜಯ್ಸಿಂಗ್ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ನ್ಯಾಯಮೂರ್ತಿ ಎಂ.ಆರ್. ಮೆಂಗಡೆ ಅವರ ಏಕಸದಸ್ಯ ಪೀಠ ನಿರಾಕರಿಸಿತು.
ಪ್ರಧಾನಿ ಮೋದಿ ಅವರ ಪದವಿ ವ್ಯಾಸಂಗಕ್ಕೆ ಸಂಬಂಧಿಸಿ ಎಎಪಿ ನಾಯಕರು ವಿಶ್ವವಿದ್ಯಾಲಯದ ಕುರಿತು ವ್ಯಂಗ್ಯ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪೀಯೂಷ್ ಪಾಟೇಲ್ ಮಾನನಷ್ಟ ದೂರು ನೀಡಿದ್ದರು.
ತಮ್ಮ ವಿರುದ್ಧದ ಆರೋಪಗಳು ವಿಭಿನ್ನವಾಗಿವೆ ಮತ್ತು ಘಟನೆ ನಡೆದ ದಿನಾಂಕಗಳು ಬೇರೆ ಬೇರೆಯಾಗಿವೆ ಎನ್ನುವುದೂ ಸೇರಿದಂತೆ ವಿವಿಧ ವಿಚಾರಗಳ ಆಧಾರದಲ್ಲಿ ಇಬ್ಬರ ವಿಚಾರಣೆಯನ್ನು ಪ್ರತ್ಯೇಕವಾಗಿ ನಡೆಸಬೇಕು ಎಂದು ಕೇಜ್ರಿವಾಲ್ ಮತ್ತು ಸಂಜಯ್ ಕೋರಿದ್ದರು. ಅವರಿಬ್ಬರ ಮನವಿಯನ್ನು ನಗರ ಮತ್ತು ಸೆಷನ್ಸ್ ನ್ಯಾಯಾಲಯಗಳು ತಿರಸ್ಕರಿಸಿದ್ದವು.
ಇಬ್ಬರ ವಿರುದ್ಧದ ಪ್ರಕರಣಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500ರ ವ್ಯಾಪ್ತಿಗೆ ಬರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣ ನ್ಯಾಯಾಲಯ ಇಬ್ಬರಿಗೂ ಸಮನ್ಸ್ ಜಾರಿಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.