ನವದೆಹಲಿ: ದತ್ತಾಂಶ ಸಂರಕ್ಷಣೆ ಹೆಸರಿನಲ್ಲಿ ಮೋದಿ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ನು(ಆರ್ಟಿಐ) ದುರ್ಬಲಗೊಳಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಜನ ಸಾಮಾನ್ಯನ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಸರ್ವಾಧಿಕಾರದ ವಿರುದ್ಧ ಹೋರಾಡಲಿದೆ ಎಂದು ಅವರು ಹೇಳಿದರು.
‘ಒಂದೆಡೆ ಭಾರತವು ತಪ್ಪು ಮಾಹಿತಿ ಹಂಚಿಕೊಳ್ಳುವ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ದತ್ತಾಂಶ ಸಂರಕ್ಷಣೆ ಹೆಸರಿನಲ್ಲಿ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗುತ್ತಿದೆ’ ಎಂದು ‘ಎಕ್ಸ್’ನಲ್ಲಿ ಹೇಳಿದರು.
‘ಪಡಿತರ ಚೀಟಿಗಳ ಪಟ್ಟಿ, ನರೇಗಾ ಫಲಾನುಭವಿಗಳು, ಸಾರ್ವಜನಿಕ ಕಲ್ಯಾಣ ಯೋಜನೆಗಳಲ್ಲಿ ತೊಡಗಿರುವವರ ಹೆಸರುಗಳು, ಮತದಾರರ ಪಟ್ಟಿ, ಸರ್ಕಾರಿ ಬ್ಯಾಂಕ್ಗಳಲ್ಲಿ ಸಾಲ ಪಡೆದು ವಿದೇಶಕ್ಕೆ ಪಲಾಯನಗೈದ ಕೋಟ್ಯಧಿಪತಿಗಳ ಹೆಸರುಗಳಂತಹ ಸಾರ್ವಜನಿಕ ವಲಯದ ಮಾಹಿತಿಗಳನ್ನು ಜನರಿಗೆ ಲಭ್ಯವಾಗುವಂತೆ ಮಾಡುವುದು ಮುಖ್ಯವಾಗಿದೆ. ಆದರೆ ಈಗ ಆ ಪರಿಸ್ಥಿತಿ ಇಲ್ಲ’ ಎಂದರು.
‘ಯಾವುದೇ ಕಾರಣಕ್ಕೂ ಆರ್ಟಿಐ ದುರ್ಬಲಗೊಳಿಸಲು ಕಾಂಗ್ರೆಸ್ ಬಿಡುವುದಿಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲಿದ್ದೇವೆ. ಬೀದಿಗಿಳಿದು ಹೋರಾಡುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.