ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ಹೊಶಿಯಾರ್ಪುರ: ಭಾರತೀಯ ಸೇನೆಯನ್ನು ‘ಇಂಡಿಯಾ’ ಮೈತ್ರಿಕೂಟ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಲೋಕಸಭೆ ಚುನಾವಣೆಯ ಕೊನೆಯ ಮತ್ತು ಏಳನೇ ಹಂತದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಶಸ್ತ್ರ ಪಡೆಯನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ಮೋದಿ ದೂರಿದ್ದಾರೆ.
ಅಗ್ನಿಪಥ ಯೋಜನೆಯನ್ನು ಜಾರಿಗೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರೀಯ ಭದ್ರತೆ ಮತ್ತು ದೇಶದ ಯುವಕರ ಭವಿಷ್ಯದೊಂದಿಗೆ ಆಟವಾಡುತ್ತಿದೆ. ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ರದ್ದುಗೊಳಿಸಲಿದೆ ಎಂದು ಕಾಂಗ್ರೆಸ್ ಹೇಳಿತ್ತು. ಇದರ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಭಾರತೀಯ ರಕ್ಷಣಾ ಪಡೆಗಳನ್ನು ಅತ್ಯಂತ ಆಧುನಿಕ ಮತ್ತು ಸಮರ್ಥ ಶಕ್ತಿಯುಳ್ಳ ಸ್ವಾವಲಂಬಿ ಪಡೆಗಳನ್ನಾಗಿ ಮಾಡುವುದು ನನ್ನ ಗುರಿಯಾಗಿದೆ. ಆದರೆ, ಇದರಿಂದ 'ಇಂಡಿಯಾ' ಮೈತ್ರಿಕೂಟಕ್ಕೆ ಕಪ್ಪು ಹಣವನ್ನು ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಸೇನೆಯನ್ನು ಗಣರಾಜ್ಯೋತ್ಸವ ಪರೇಡ್ಗಾಗಿ ಮಾತ್ರ ರಚಿಸಲಾಗಿಲ್ಲ. ಯುದ್ಧಗಳಲ್ಲಿ ಹೋರಾಡಲು ಶತ್ರುಗಳನ್ನು ಸೋಲಿಸಲು ಮತ್ತು ನಮ್ಮ ಮಾತೃಭೂಮಿಯನ್ನು ರಕ್ಷಿಸಲು ರಚಿಸಲಾಗಿದೆ. ಆದರೆ, ವಿರೋಧ ಪಕ್ಷಗಳು ಸೇನೆಯನ್ನು ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಇದಕ್ಕಿಂತ ದೊಡ್ಡ ದುಷ್ಕೃತ್ಯ ಮತ್ತೊಂದಿಲ್ಲ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.