ಲೋಕಸಭೆ
ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಿದ್ದನ್ನು ಖಂಡಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು.
ಈ ವೇಳೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸರ್ಕಾರದ ನಡೆಯನ್ನು ಖಂಡಿಸಿದರು.
ಸದನದಲ್ಲಿ ಉಂಟಾದ ಗದ್ದಲದ ಕಾರಣ ಪ್ರಧಾನಿ ಭಾಷಣವನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.
ಗುರುವಾರ ಲೋಕಸಭೆ ಆರಂಭವಾಗುತ್ತಿದ್ದಂತೇ, ಪ್ರಧಾನಿ ಮೋದಿ ಅವರ ಭಾಷಣ ರದ್ದುಗೊಳಿಸಿದ್ದನ್ನು ಪ್ರಶ್ನಿಸಿದ ಪ್ರತಿಪಕ್ಷ ನಾಯಕರು, ಗದ್ದಲದ ನೆಪ ಹೇಳಿ ಪ್ರಧಾನಿ ಭಾಷಣದಿಂದ ತಪ್ಪಿಸಿಕೊಂಡಿರುವುದು ಸದನದ ಸಂಪ್ರದಾಯಕ್ಕೆ ಮಾಡಿದ ಅವಮಾನ ಎಂದರು.
ಪ್ರಧಾನಿ ಮೋದಿ ಭಾಷಣ ರದ್ದುಗೊಂಡಿದ್ದಕ್ಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದು, ಸದನದ ಬಾವಿಗಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಸ್ಪೀಕರ್ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೇ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ, ವಿಪಕ್ಷ ನಾಯಕ ಮಾತನಾಡುತ್ತೇನೆ ಎಂದರೆ ಮಾತನಾಡಲು ಬಿಡುವುದಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ ಎಂದು ವಾಗ್ದಾಳಿ ನಡೆಸಿದರು.
ಆದಾಗ್ಯೂ, ಸಂಜೆ 5 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.