ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯದಿನದ ಭಾಷಣ ಉತ್ತೇಜನಕಾರಿಯಾಗಿದ್ದು, ಸರ್ವಾಂಗೀಣ ಪ್ರಗತಿ, ಸ್ವಾವಲಂಬಿ ಹಾಗೂ ಸದೃಢ ಭಾರತದ ನಿರ್ಮಾಣವನ್ನು ಧ್ವನಿಸಲಿದೆ ಎಂದು ಬಿಜೆಪಿ ಮುಖಂಡರು ಶನಿವಾರ ಅಭಿಪ್ರಾಯಪಟ್ಟಿದ್ದಾರೆ.
ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಅವರು ಆತ್ಮನಿರ್ಭರ ಭಾರತ ನಿರ್ಮಾಣವನ್ನು ಪ್ರತಿಪಾದಿಸಿದ್ದರು. ಪ್ರಧಾನಿ ಅವರದೂರದೃಷ್ಟಿ, ಧ್ಯೇಯ, ಸ್ವಾಭಿಮಾನಿ ಭಾರತ ನಿರ್ಮಿಸುವ ಧ್ಯೇಯವನ್ನು ಬಿಂಬಿಸಿತು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಕುರಿತು ಮಾಡಿದ ಸರಣಿ ಟ್ವೀಟ್ ಗಳಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಇಂಥದೇ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಗೃಹ ಸಚಿವ ಅಮಿತ್ ಶಾ, ಭಾಷಣವನ್ನುಆದರ್ಶಪ್ರಾಯವಾದುದು ಎಂದು ಬಣ್ಣಿಸಿದ್ದಾರೆ. ಇದು ಸ್ಪಷ್ಟವಾಗಿ ಸುದೃಢ ಮತ್ತು ಸ್ವಾವಲಂಬಿ ಭಾರತ ನಿರ್ಮಿಸುವ ಬದ್ಧತೆಯನ್ನು ಬಿಂಬಿಸುತ್ತದೆ ಎಂದಿದ್ದಾರೆ.
ಈ ಕುರಿತ ಟ್ವೀಟ್ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಜಾಗತಿಕ ಆರ್ಥಿಕತೆಗೆ ಹೊಸ ದಿಕ್ಕು ನೀಡುವ ಕೌಶಲ ಮತ್ತು ಸಾಮರ್ಥ್ಯ ಭಾರತಕ್ಕಿದೆ ಎಂಬುದನ್ನು ಈ ಮೂಲಕ ಮೋದಿ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.