ADVERTISEMENT

ಉನ್ನತ ಶಿಕ್ಷಣ ಸಂಸ್ಥೆಗಳ ಮಾನ್ಯತೆ: ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸಮಿತಿ ರಚನೆ

ಪಿಟಿಐ
Published 4 ನವೆಂಬರ್ 2022, 14:35 IST
Last Updated 4 ನವೆಂಬರ್ 2022, 14:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಯನ್ನು ಬಲಪಡಿಸಲು ಕೇಂದ್ರ ಶಿಕ್ಷಣ ಸಚಿವಾಲಯವುಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ಐಐಟಿ ಕಾನ್ಪುರದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ರಾಧಾಕೃಷ್ಣನ್‌ ಅವರು ಸಮಿತಿಯ ಮುಖ್ಯಸ್ಥರಾಗಿರುವರು. ಅವರು ಐಐಟಿ ಮಂಡಳಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಅಸ್ಸಾಂನ ಮಹಾಪುರುಷ ಶ್ರೀಮಂತ ಶಂಕರದೇವ ವಿಶ್ವವಿದ್ಯಾಲಯ ಕುಲಪತಿ ಮೃದುಲ್‌ ಹಜಾರಿಕಾ, ಐಐಎಂ ಲಖನೌನ ಪ್ರಾಧ್ಯಾಪಕ ಭರತ್‌ ಭಾಸ್ಕರ್‌ ಮತ್ತು ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಸಮಿತಿಯ ಸದಸ್ಯರಾಗಿದ್ದಾರೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಮೌಲ್ಯಮಾಪನ ಮತ್ತು ಮಾನ್ಯತೆ ಪ್ರಕ್ರಿಯೆಯನ್ನು ಬಲಪಡಿಸುವುದು ಮತ್ತು 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ರೂಪಿಸಲಾದ ರಾಷ್ಟ್ರೀಯ ಮಾನ್ಯತಾ ಮಂಡಳಿಯ ರೂಪುರೇಷೆಗಳನ್ನು ಸಿದ್ಧಪಡಿಸುವ ಕಾರ್ಯವನ್ನು ಈ ಸಮಿತಿ ನಿರ್ವಹಿಸಲಿದೆ’ ಎಂದೂ ವಿವರಿಸಿದ್ದಾರೆ.

‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟ ಮತ್ತು ಕಾರ್ಯನಿರ್ವಹಣೆಯಲ್ಲಿ ಮಾನ್ಯತೆಯು ಪ್ರಮುಖ ಪಾತ್ರವಹಿಸುತ್ತದೆ. ಮಾನ್ಯತೆ ನೀಡುವ ಪ್ರಕ್ರಿಯೆಯಿಂದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.