
ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ತೆಲಂಗಾಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ತೆಲಂಗಾಣ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿ 15 ಸದಸ್ಯರಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡಿಲ್ಲ. ರಾಜ್ಯದ ವಿಧಾನಸಭೆಯಲ್ಲಿ 119 ಶಾಸಕರಿದ್ದು, ನಿಯಮಗಳ ಪ್ರಕಾರ ಸಂಪುಟದಲ್ಲಿ ಇನ್ನೂ ಮೂವರಿಗೆ ಅವಕಾಶವಿದೆ.
ಸಂಪುಟಕ್ಕೆ ಅಜರುದ್ದೀನ್ ಸೇರ್ಪಡೆಯಾದರೆ ರೇವಂತ ರೆಡ್ಡಿ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೊದಲ ಸಚಿವರಾಗಿರಲಿದ್ದಾರೆ.
ಒಂದು ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರು ಇರುವ ಜುಬಿಲಿ ಹಿಲ್ಸ್ ಕ್ಷೇತ್ರದ ಉಪ ಚುನಾವಣೆ ನಡೆಯಲಿರುವ ಕಾರಣದಿಂದಾಗಿ ಅಜರುದ್ದೀನ್ ಅವರನ್ನು ಸಂಪುಟಕ್ಕೆ ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ. ಬಿಆರ್ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಈ ವರ್ಷದ ಜೂನ್ನಲ್ಲಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರಿಂದ ಈ ಕ್ಷೇತ್ರವು ತೆರವುಗೊಂಡಿತ್ತು.
ಅಜರುದ್ದೀನ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ತೆಲಂಗಾಣ ಸರ್ಕಾರವು ಆಗಸ್ಟ್ ಕೊನೆಯ ವಾರದಲ್ಲಿ ನಾಮನಿರ್ದೇಶನ ಮಾಡಿತ್ತು. ಆದರೆ ರಾಜ್ಯಪಾಲರು ಇನ್ನೂ ಅನುಮೋದನೆ ನೀಡಿಲ್ಲ. 2023ರ ಚುನಾವಣೆಯಲ್ಲಿ ಅವರು ಜುಬಿಲಿ ಹಿಲ್ಸ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.