ನವದೆಹಲಿ: ‘ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣದಲ್ಲಿ ಇಸಿಐಆರ್ (ಎಫ್ಐಆರ್ಗೆ ಸಮ) ರದ್ದುಗೊಳಿಸಲು ಕೋರಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾ. ದೀಪಾಂಕರ್ ದತ್ತಾ ಮತ್ತು ನ್ಯಾ. ಅಗಸ್ಟಿನ್ ಜಾರ್ಜ್ ಮಾಸಿ ಅವರಿದ್ದ ಪೀಠದ ಎದುರು ಜಾಕ್ವಲಿನ್ ಫರ್ನಾಂಡಿಸ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು.
ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ. ಇದನ್ನು ರದ್ದುಗೊಳಿಸುವಂತೆ ಕೋರಿ ಜಾಕ್ವೆಲಿನ್ ಅವರು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಹೈಕೋರ್ಟ್ ಆದೇಶವನ್ನು ಜಾಕ್ವಲಿನ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ಸುಕೇಶ್ ಚಂದ್ರಶೇಖರ್ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವಲಿನ್ ಆರೋಪಿಯಾಗಿದ್ದಾರೆ. ತನಿಖೆಯ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಇತ್ತೀಚೆಗೆ ಹಾಜರಾಗಿದ್ದರು.
ರ್ಯಾನ್ಬಾಕ್ಸಿಯ ಮಾಜಿ ಪ್ರವರ್ತಕರಾದ ಶಿವಿಂದರ್ ಸಿಂಗ್ ಮತ್ತು ಮಲ್ವಿಂದರ್ ಸಿಂಗ್ ಅವರ ಪತ್ನಿಯರಿಗೆ ₹200 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಸುಕೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.