ಲಖನೌ: ಪೊಲೀಸರ ನಿರ್ಲಕ್ಷ್ಯ ಪ್ರತಿಭಟಿಸಿ ಮಹಿಳೆಯೊಬ್ಬರು ಹಾಗೂ ಅವರ ಪುತ್ರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶುಕ್ರವಾರ ಸಂಜೆ ಘಟನೆ ನಡೆದಿದ್ದು, ತಕ್ಷಣವೇ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಪೊಲೀಸ್ ಮೂಲಗಳ ಪ್ರಕಾರ, ಗಾಯಾಳುಗಳು ಅಮೇಠಿ ಜಿಲ್ಲೆಯ ಜಾಮೊ ಪ್ರದೇಶದ ನಿವಾಸಿಗಳು. ಜಮೀನಿನ ವಿಷಯಕ್ಕೆ ಸಂಬಂಧಿಸಿ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಆ ಕುರಿತು ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳಲು ನಿರ್ಲಕ್ಷ್ಯವಹಿಸಿದ್ದರಿಂದಬೇಸರಗೊಂಡಿದ್ದರು. ಹಿರಿಯ ಅಧಿಕಾರಿಗಳ ಮಧ್ಯಪ್ರವೇಶದ ಬಳಿಕ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ. ಮಹಿಳೆ ಮತ್ತು ಆಕೆಯ ಪುತ್ರಿ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿತ್ತು.
ಶುಕ್ರವಾರ ಬೆಳಿಗ್ಗೆ ಲಖನೌಗೆ ಬಂದ ತಾಯಿ–ಮಗಳು ಸೀಮೆ ಎಣ್ಣೆಯನ್ನೂ ತಂದಿದ್ದರು. ಅದನ್ನು ಲೋಕಭವನದಿಂದ ಕೆಲವೇ ಮೀಟರ್ ದೂರದಲ್ಲಿರುವಾಗ ಮೈಮೇಲೆ ಸುರಿದುಕೊಂಡಿದ್ದರು. ಕಟ್ಟಡದ ಬಳಿ ತಲುಪುತ್ತಿದ್ದಂತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಆದೇಶಿಸಲಾಗಿದೆ. ಸತ್ಯಾಂಶವೇನು ಎಂದು ತಿಳಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.