ADVERTISEMENT

ಮಧ್ಯಪ್ರದೇಶ ಸರ್ಕಾರ ಶೀಘ್ರ ಪತನ: ಬಿಜೆಪಿ ಸುಳಿವು

ಲೋಕಸಭೆ ಚುನಾವಣೆ ಬಳಿಕ ಮುಹೂರ್ತ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2019, 20:00 IST
Last Updated 3 ಮಾರ್ಚ್ 2019, 20:00 IST
   

ಭೋಪಾಲ್‌: ಲೋಕಸಭೆಯ ಚುನಾವಣೆ ಬಳಿಕ ಮಧ್ಯ ಪ್ರದೇಶ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂಬ ಸುದ್ದಿ ಮಧ್ಯಪ್ರದೇಶ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ.

ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿ ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಅಧಿಕಾರ ಹಿಡಿದ ಬಳಿಕ ಮುಖ್ಯಮಂತ್ರಿ ಕಮಲನಾಥ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪತನವಾಗುತ್ತದೆ ಎಂಬ ವಿಶ್ವಾಸ ಬಿಜೆಪಿ ಕಾರ್ಯಕರ್ತರಲ್ಲಿ ಮನೆಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಹತಾಶರಾಗಿರುವ ಬಿಜೆಪಿ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲು ಪಕ್ಷದ ನಾಯಕರೇ ಉದ್ದೇಶಪೂರ್ವಕವಾಗಿ ಇಂಥ ಸುದ್ದಿ ಹರಡುತ್ತಿದ್ದಾರೆ ಎನ್ನಲಾಗಿದೆ.

ADVERTISEMENT

ಆದರೆ, ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸುವ ಬಗ್ಗೆ ಯಾವೊಬ್ಬ ಬಿಜೆಪಿ ನಾಯಕರೂ ಬಹಿರಂಗವಾಗಿ ಮಾತನಾಡುತ್ತಿಲ್ಲ. ಪಕ್ಷದ ಆಂತರಿಕ ಭಿನ್ನಮತದಿಂದ ಕಾಂಗ್ರೆಸ್‌ ಸರ್ಕಾರ ತಾನಾಗಿಯೇ ಪತನವಾಗಲಿದೆ ಎನ್ನುವುದು ಬಿಜೆಪಿ ನಾಯಕರ ವಾದವಾಗಿದೆ.

ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಸೆಳೆದು ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚಿಸಲಾಗುವುದು. ಅದಕ್ಕಾಗಿ ಸ್ವಲ್ಪ ದಿನ ತಾಳ್ಮೆಯಿಂದ ಕಾಯುವಂತೆ ಪಕ್ಷದ ನಾಯಕರು ತಮ್ಮ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್‌ 114 ಮತ್ತು ಬಿಜೆಪಿ 107 ಸ್ಥಾನಗಳಲ್ಲಿ ಜಯಗಳಿಸಿವೆ. ನಾಲ್ವರು ಪಕ್ಷೇತರರು,ಇಬ್ಬರು ಬಿಎಸ್‌ಪಿ ಶಾಸಕರು ಮತ್ತು ಸಮಾಜವಾದಿ ಪಕ್ಷದ ಒಬ್ಬ ಶಾಸಕನ ಬೆಂಬಲದೊಂದಿಗೆ ಕಾಂಗ್ರೆಸ್‌ ಸರ್ಕಾರ ರಚಿಸಿದೆ.

ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಮತ್ತು ದಟ್ಟವಾಗಿ ಹರಡಿರುವ ಸುದ್ದಿ ಬಗ್ಗೆ ಮುಖ್ಯಮಂತ್ರಿ ಕಮಲನಾಥ್‌ ಅವರಿಗೂ ಮಾಹಿತಿ ಇದೆ. ಎಲ್ಲ ಬೆಳವಣಿಗೆಗಳನ್ನು ಅವರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಸರ್ಕಾರದ ಗುಪ್ತಚರ ಇಲಾಖೆ ಶಾಸಕರ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.