ಭೋಪಾಲ್: 1984ರ ಅನಿಲ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ತಿಳಿಸಿದರು.
ಅನಿಲ ದುರಂತದ 36ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಎಲ್ಲಾ ಧರ್ಮಗಳ ಸಭೆಯನ್ನು ಗುರುವಾರ ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಚೌಹಾಣ್,‘ ಅನಿಲ ದುರಂತದಲ್ಲಿ ತಮ್ಮ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ನೀಡುತ್ತಿದ್ದ ₹1000 ಪಿಂಚಣಿಯನ್ನು ಪುನರಾರಂಭಿಸಲಾಗುವುದು. ಅಲ್ಲದೆ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.
‘ವಿಶ್ವದ ಯಾವುದೇ ನಗರವು ಮತ್ತೊಂದು ಭೋಪಾಲ್ ಆಗಬಾರದು ಎಂಬುದನ್ನು ಈ ಸ್ಮಾರಕವು ನೆನಪಿಸಲಿದೆ. ದೇವರು ನಮಗೆ ನೀಡಿರುವ ಈ ಜಗತ್ತನ್ನು ಮುಂದಿನ ಪೀಳಿಗೆಗಾಗಿ ಉಳಿಸಿಕೊಳ್ಳಬೇಕಾಗಿದೆ’ ಎಂದು ಅವರು ಹೇಳಿದರು.
2019ರಲ್ಲಿ ಕಾಂಗ್ರೆಸ್ ಸರ್ಕಾರವು ಅನಿಲ ದುರಂತದಲ್ಲಿ ತಮ್ಮ ಪತಿಯನ್ನು ಕಳೆದುಕೊಂಡ ಮಹಿಳೆಯರಿಗೆ ನೀಡುತ್ತಿದ್ದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು.
‘1984ರ ಡಿಸೆಂಬರ್ 3ರಂದು ಭೋಪಾಲದ ಯುನಿಯನ್ ಕಾರ್ಬೈಡ್ ಕಂಪನಿಯ ಕಾರ್ಖಾನೆಯಲ್ಲಿ ಮಿಥೇಲ್ ಐಸೊಸೈನೇಟ್ ಅನಿಲ ಸೋರಿಕೆಯಾಯಿತು. ಇದರಿಂದಾಗಿ ಕಾರ್ಮಿಕರು ಮತ್ತು ಸ್ಥಳೀಯ ನಿವಾಸಿಗಳು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಹಾನಿಗೊಳಗಾಗಿದ್ದಾರೆ. ದುರಂತಕ್ಕೆ ಸಂಬಂಧಿಸಿ ಈ ತನಕ ಅಂದಾಜು 15 ಸಾವಿರ ಜನರು ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.