ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಯುವ ಕಾಂಗ್ರೆಸ್ ಮುಖಂಡರೊಂದಿಗೆ ಮಂಗಳವಾರ ಬೆಳಿಗ್ಗೆ ಸೈಕಲ್ ಮೂಲಕ ಸಂಸತ್ಗೆ ತೆರಳಿ ಪ್ರತಿಭಟಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಸುರೇಶ್ ಆರೋಪಿಸಿದರು.
ತೈಲೋತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸಿದ್ದರಿಂದ ಪೆಟ್ರೋಲ್ ಬೆಲೆ ಶತಕದ ಅಂಚನ್ನು ದಾಟಿದೆ. ಕೂಡಲೇ ಬೆಲೆ ಇಳಿಕೆ ಮಾಡಿ ಜನತೆಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಕೋರಿದರು.
'ತೈಲ ಬೆಲೆ ಹೆಚ್ಚಳದಿಂದಾಗಿ ಜನರು ದುಬಾರಿ ಮೊತ್ತದ ವಾಹನಗಳನ್ನು ಮೂಲೆಯಲ್ಲಿರಿಸಿ, ಕೆಲಸ, ಕಾರ್ಯಗಳಿಗೆ ನಡೆದುಕೊಂಡು ಅಥವಾ ಸೈಕಲ್ ಅಂತೆಯೇ ನಾವೂ ಸಂಚರಿಸುವುದಕ್ಕೆ ಶುರು ಮಾಡಿದ್ದಾರೆ. ಸೈಕಲ್ ನಲ್ಲಿ ತೆರಳುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳುತ್ತಿದ್ದೇವೆ' ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ ಹೇಳಿದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್, ರಾಹುಲ್ ರಾಯ್ ಮತ್ತಿತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.