ಎಐ ಚಿತ್ರ
ಭೋಪಾಲ್: ಕೆಮ್ಮಿನ ಸಿರಪ್ ಸೇವಿಸಿದ ನಂತರ ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಮಧ್ಯಪ್ರದೇಶ ಸರ್ಕಾರ ಭರಿಸಲಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಕಳೆದ ವಾರ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮೂತ್ರಪಿಂಡದ ವೈಫಲ್ಯದಿಂದಾಗಿ 14 ಮಕ್ಕಳು ಮೃತಪಟ್ಟಿದ್ದರು. ಔಷಧಿಯ ಮಾದರಿ ಪರೀಕ್ಷೆ ವೇಳೆ ವಿಷಕಾರಿ ಅಂಶವಿರುವುದು ಬೆಳಕಿಗೆ ಬಂದಿತ್ತು.
ಕೋಲ್ಡ್ರಿಫ್ ಸಿರಪ್ ಸೇವಿಸಿ ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿರುವ ಛಿಂದ್ವಾರದ ಏಳು ಮತ್ತು ಬೇತಲ್ನ ಇಬ್ಬರು ಮಕ್ಕಳು ನೆರೆಯ ರಾಜ್ಯ ಮಹಾರಾಷ್ಟ್ರದ ನಾಗ್ಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಕ್ಕಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವಂತೆ ಮುಖ್ಯಮಂತ್ರಿ ಮೋಹನ್ ಯಾದವ್ ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಲ್ಲದೇ, ಆಸ್ಪತ್ರೆಗಳಿಗೆ ವೈದ್ಯರ ಜಂಟಿ ತಂಡವನ್ನು ನಿಯೋಜಿಸಲಾಗಿದ್ದು, ಮಕ್ಕಳಿಗೆ ಸೂಕ್ತ ಚಿಕಿತ್ಸೆ ಖಚಿತಪಡಿಸಿಕೊಳ್ಳಲು ತಂಡವು ಸಂತ್ರಸ್ತ ಕುಟುಂಬಗಳು ಮತ್ತು ಆಸ್ಪತ್ರೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ ಎಂದಿದ್ದಾರೆ.
ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಮಧ್ಯಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. ರಾಜ್ಯ ಔಷಧಿ ನಿಯಂತ್ರಕರನ್ನು ವರ್ಗಾವಣೆ ಮಾಡಲಾಗಿದೆ.
ನಿರ್ಲಕ್ಷ್ಯದ ಆರೋಪದ ಮೇಲೆ ವೈದ್ಯ ಪ್ರವೀಣ್ ಸೋನಿ ಅವರನ್ನು ಬಂಧಿಸಲಾಗಿದ್ದು, ಕೋಲ್ಡ್ರಿಫ್ ಸಿರಪ್ ತಯಾರಿಕ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.