ADVERTISEMENT

ಐದು ರಾಜ್ಯಗಳ ಚುನಾವಣೆ ಬಳಿಕ ಎಂಎಸ್‌ಪಿ ಸಮಿತಿ ರಚನೆ: ತೋಮರ್

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2022, 9:20 IST
Last Updated 4 ಫೆಬ್ರುವರಿ 2022, 9:20 IST
ರಾಜ್ಯಸಭೆಯಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್: ಪಿಟಿಐ ಚಿತ್ರ
ರಾಜ್ಯಸಭೆಯಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್: ಪಿಟಿಐ ಚಿತ್ರ   

ರಾಜ್ಯಸಭೆ: ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಒದಗಿಸುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲು ಸರ್ಕಾರ ಬದ್ಧವಾಗಿದೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದ ನಂತರ ಅದನ್ನು ಮಾಡಬಹುದು ಎಂದು ಚುನಾವಣಾ ಆಯೋಗ ಹೇಳಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶುಕ್ರವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಎಂಎಸ್‌ಪಿ ಮೇಲಿನ ಕಾನೂನು ಖಾತರಿಯ ರೈತರ ಬೇಡಿಕೆಯನ್ನು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದರು.

ಪ್ರಶ್ನೋತ್ತರ ವೇಳೆಯಲ್ಲಿ ಪೂರಕ ಪ್ರಶ್ನೆಗೆ ಉತ್ತರಿಸಿದ ತೋಮರ್, ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಎಂಎಸ್‌ಪಿ ಸಮಿತಿ ರಚನೆ ಕುರಿತಂತೆ ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಎಂಎಸ್‌ಪಿ ಸಮಿತಿಯನ್ನು ರಚಿಸುವ ವಿಷಯ ಸಚಿವಾಲಯದ ಪರಿಗಣನೆಯಲ್ಲಿದೆ ಮತ್ತು ಚುನಾವಣೆ ಮುಗಿದ ನಂತರ ರಚಿಸಲಾಗುವುದು ಎಂದು ಹೇಳಿದರು.

ADVERTISEMENT

‘ಬೆಳೆ ವೈವಿಧ್ಯೀಕರಣ, ನೈಸರ್ಗಿಕ ಕೃಷಿ, ಪರಿಣಾಮಕಾರಿ ಎಂಎಸ್‌ಪಿ ಮತ್ತು ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ ಎಂದು ಇಡೀ ದೇಶಕ್ಕೆ ತಿಳಿದಿದೆ. ಪ್ರಧಾನಿ ಮಾಡಿದ ಘೋಷಣೆಗೆ ಸರ್ಕಾರ ಬದ್ಧವಾಗಿದೆ. ಈ ವಿಷಯವು ಸಚಿವಾಲಯದ ಪರಿಗಣನೆಯಲ್ಲಿದೆ’ಎಂದು ತೋಮರ್ ಹೇಳಿದರು.

ಚುನಾವಣೆ ನಡೆಯುತ್ತಿರುವುದರಿಂದ ಮಾರ್ಗದರ್ಶನಕ್ಕಾಗಿ ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ ಎಂದರು.

‘ಇದೀಗ, ಚುನಾವಣಾ ಆಯೋಗದ ಉತ್ತರ ಬಂದಿದೆ. ಚುನಾವಣೆ ಮುಗಿದ ನಂತರ ಸಮಿತಿಯನ್ನು ರಚಿಸಬೇಕು ಎಂದು ಅದು ಹೇಳಿದೆ’ಎಂದು ಸಚಿವರು ಹೇಳಿದರು.

ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ರಾಜ್ಯಗಳಲ್ಲಿ ಚುನಾವಣೆ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.