ADVERTISEMENT

ರಾಷ್ಟ್ರಪತಿ ಚುನಾವಣೆ: ಮುರ್ಮು, ಸಿನ್ಹಾ ನಾಮಪತ್ರ ಕ್ರಮಬದ್ಧ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 11:25 IST
Last Updated 30 ಜೂನ್ 2022, 11:25 IST
.
.   

ನವದೆಹಲಿ:ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಪರಿಶೀಲಿಸಲಾಗಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ.

ಈ ಇಬ್ಬರು ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ ಎಂದು ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಗುರುವಾರ ತಿಳಿಸಿದ್ದಾರೆ.

94 ಅಭ್ಯರ್ಥಿಗಳಿಂದ 115 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಅಗತ್ಯ ದಾಖಲೆಗಳಿರದ ಕಾರಣ 107 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ಮುರ್ಮು ಮತ್ತು ಸಿನ್ಹಾ ಅವರು ತಲಾ ನಾಲ್ಕು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ್ದು, ಕ್ರಮಬದ್ಧವಾಗಿರುವುದರಿಂದ ಈ ಇಬ್ಬರ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ನಾಮಪತ್ರ ಹಿಂಪಡೆಯಲು ಜುಲೈ 2 ಅಂತಿಮ ದಿನ. ಅಂದು ಮಧ್ಯಾಹ್ನ 3 ಗಂಟೆಗೆ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಗೆಜೆಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ಆರ್‌ಜೆಡಿ ಸಂಸ್ಥಾಪಕ ಲಾಲು ಪ್ರಸಾದ್‌ ಯಾದವ್‌ ಅವರ ಹೆಸರಿನ ವ್ಯಕ್ತಿಯೊಬ್ಬರು, ದೆಹಲಿಯ ಪ್ರೊಫೆಸರ್‌, ತಮಿಳುನಾಡಿನ ಸಾಮಾಜಿಕ ಹೋರಾಟಗಾರರೊಬ್ಬರು ಹಾಗೂ ಮುಂಬೈ ಕೊಳೆಗೇರಿಯ ನಿವಾಸಿಯೊಬ್ಬರು ನಾಮಪತ್ರ ಸಲ್ಲಿಸಿದ್ದರು. ಆರ್‌ಬಿಐ ಮತ್ತು ಸರ್ಕಾರದ ಖಜಾನೆಗೆ ₹15 ಸಾವಿರ ಠೇವಣಿ ಇಡದ ಕಾರಣಕ್ಕೆ ಬಹುತೇಕ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.