ಮುಂಬೈ: ‘ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ತನ್ನ ಸಂಪೂರ್ಣ ಅವಧಿಯನ್ನು ಪೂರೈಸಲಿದೆ. ಈ ಬಗ್ಗೆ ಅನುಮಾನ ಬೇಡ’ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿಯಾಗಿದ್ದರು. ಜತೆಗೆ, ಕಳೆದ ವಾರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಪವಾರ್ ಅವರನ್ನು ಭೇಟಿಯಾಗಿದ್ದರು. ಈ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪವಾರ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ.
ಎನ್ಸಿಪಿಯ 22ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪವಾರ್ ಅವರು, ‘ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲೂ ಎಂವಿಎ ಒಗ್ಗಟ್ಟಿನ ಹೋರಾಟ ನಡೆಸಿ ಉತ್ತಮ ಸಾಧನೆ ತೋರಲಿದೆ’ ಎಂದು ಹೇಳಿದ್ದಾರೆ.
‘ರಾಜ್ಯ ಸರ್ಕಾರ ಉಳಿವಿನ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಲಾಗುತಿದೆ. ಶಿವಸೇನಾ ವಿಶ್ವಾಸಾರ್ಹತೆ ಹೊಂದಿರುವ ಪಕ್ಷ. ಎನ್ಸಿಪಿ, ಶಿವಸೇನಾ ಮತ್ತು ಕಾಂಗ್ರೆಸ್ ಒಗ್ಗೂಡಿ ಕಾರ್ಯನಿರ್ವಹಿಸುತ್ತಿವೆ. ಉತ್ತಮ ಅನುಭವವಾಗಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.