ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ನೀಡಿರುವ ಹೇಳಿಕೆಗೆ ರೈತ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದೊಂದಿಗೆ ಒತ್ತಡದಲ್ಲಿ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದಿರುವ ಅವರು, 'ಕೃಷಿ ಕಾಯ್ದೆಗಳ ಅಮಾನತು ಕುರಿತು ಪ್ರಧಾನಿ ಮೋದಿ ವ್ಯಕ್ತಪಡಿಸಿರುವ ನಿಲುವಿನ ಬಗ್ಗೆ ನಾವು ಚರ್ಚೆ ನಡೆಸಲಿದ್ದೇವೆ. ಪ್ರಧಾನಿ ನಮ್ಮವರು. ಅವರನ್ನು ಗೌರವಿಸುತ್ತೇವೆ' ಎಂದು ತಿಳಿಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ಧರಣಿ ಮಾಡುತ್ತಿದ್ದ ರೈತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಿಡುಗಡೆ ಮಾಡಬೇಕು ಎಂದು ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
'ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರೈತ ಮುಖಂಡರೊಂದಿಗೆ ನಡೆದಿರುವ 11ನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಕೊಡುಗೆಗೆ ಇಂದಿಗೂ ಬದ್ಧವಾಗಿದೆ' ಎಂದು ಪ್ರಧಾನಿ ಮೋದಿ ಶನಿವಾರ ತಿಳಿಸಿದ್ದರು.
ಬಿಕೆಯು ವಕ್ತಾರ ರಾಕೇಶ್ ಟಿಕಾಯತ್ ಅವರು ಗುರುವಾರ ಗಾಜಿಪುರ ಪ್ರತಿಭಟನಾ ಸ್ಥಳದಲ್ಲಿ ಕಣ್ಣೀರು ಹಾಕಿದ್ದರು. ಎರಡು ತಿಂಗಳಿಂದ ಗಾಜಿಪುರದಲ್ಲಿ ಪ್ರತಿ ಭಟನೆ ನಡೆಸುತ್ತಿರುವ ರೈತರನ್ನು ಪೊಲೀಸರು ಬಲವಂತವಾಗಿ ತೆರವು ಮಾಡಲು ಮುಂದಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಹಾಗಾಗಿ, ಮುಜಫ್ಫರ್ ನಗರದಲ್ಲಿ ನಡೆದ ಮಹಾಪಂಚಾಯಿತಿಗೆ ಉತ್ತರ ಪ್ರದೇಶದ ಪೂರ್ವ ಭಾಗದಿಂದ ಸಾವಿರಾರು ಜನರು ಬಂದಿದ್ದಾರೆ.
ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ರೈತ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.