
ನವದೆಹಲಿ (ಪಿಟಿಐ): ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ ಒಂದರ ಭಾನುವಾರ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ತಿರುಪ್ಪರನ್ಕುಂದ್ರಮ್ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ರಾಜಸ್ಥಾನ ಮತ್ತು ಗುಜರಾತ್ ಪ್ರವಾಸ ಮುಗಿಸಿ ಶನಿವಾರ ರಾತ್ರಿಯೇ ಮೋದಿ ಚೆನ್ನೈ ತಲುಪಲಿದ್ದಾರೆ. ಭಾನುವಾರ ಅವರು ಎರಡೂ ರಾಜ್ಯಗಳ ರಸ್ತೆ, ರೈಲು ಮತ್ತು ಇತರೆ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ವೇಲೂರು ಸೇರಿ ಮೂರು ಆಕಾಶವಾಣಿ ಎಫ್ಎಂ ಪ್ರಸಾರ ಕೇಂದ್ರಗಳಿಗೂ ಚಾಲನೆ ನೀಡಲಿದ್ದಾರೆ.
ಪುದುಚೇರಿಯಲ್ಲಿ ಭಾನುವಾರ ಮಧ್ಯಾಹ್ನ ₹2,700 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಪ್ರಧಾನಿ ಶಿಲಾನ್ಯಾಸ ನೆರವೇರಿಸಿ, ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮದುರೈಗೆ ಭೇಟಿ ನೀಡಿ ₹4,400 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದು ಪ್ರಧಾನಿ ಕಚೇರಿ ಪ್ರಕಟಣೆ ತಿಳಿಸಿದೆ.
ಸಂಜೆ 4 ಗಂಟೆಗೆ ತಿರುಪ್ಪರನ್ಕುಂದ್ರಮ್ನಲ್ಲಿರುವ ಅರುಳ್ಮಿಗು ಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ಪೂಜೆ ನೆರವೇರಿಸಿ ದರ್ಶನ ಪಡೆಯಲಿದ್ದಾರೆ. ಕಾರ್ತಿಕ ದೀಪ ವಿವಾದದ ಕಾರಣಕ್ಕೆ ಈ ಕ್ಷೇತ್ರ ಭಾರಿ ಚರ್ಚೆಗೆ ಒಳಗಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.