ನವದೆಹಲಿ:ನ್ಯಾಷನಲ್ ಹೆರಾಲ್ಡ್ ಪ್ರಕರಣದ ದೂರುದಾರರಾದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರ ವಿಚಾರಣೆಯನ್ನು ದೆಹಲಿ ಕೋರ್ಟ್ ಜನವರಿ 8ಕ್ಕೆ ನಡೆಸಲಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಮೊತಿಲಾಲ್ ವೊರಾ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡುವುದನ್ನು ತಡೆಯುವಂತೆ ಮೊಕದ್ದಮೆ ಹೂಡಿದ್ದರು.ಇದರ ವಿಚಾರಣೆಯನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮಾರ್ ವಿಶಾಲ್ ಮುಂದೂಡಿದ್ದಾರೆ.
ಸ್ವಾಮಿ ಟ್ವೀಟ್ ಮಾಡುವ ಮೂಲಕ ನ್ಯಾಯಾಲಯದ ವಿಚಾರಣೆಯ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ ಎಂದು ವೊರಾ ಆರೋಪಿಸಿದ್ದರು. ಈ ಆರೋಪವನ್ನು ನಿರಾಕರಿಸಿರುವ ಸ್ವಾಮಿ, ನನಗೆ ಟ್ವೀಟ್ ಮಾಡುವ ಹಕ್ಕಿದೆ ಎಂದು ಪ್ರತಿಪಾದಿಸಿದ್ದಾರೆ.
ಅಸೋಸಿಯೇಟ್ ಜರ್ನಲ್ ಲಿಮಿಟೆಡ್ ಮಾಲೀಕತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್(ವೈಇಪಿಎಲ್) ಮೂಲಕ ಬರೀ ₹50 ಲಕ್ಷಕ್ಕೆ ಖರೀದಿಸಿ, ನಿಧಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರರ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.