ನವದೆಹಲಿ:ಲೋಕಸಭೆ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಷ್ಟ್ರದ ಹಲವೆಡೆ ಪ್ರಮುಖ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಆರಂಭಿಸಿವೆ.
ಜಮ್ಮು, ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ. ಈ ಸಂಬಂಧ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಫಾರುಕ್ ಅಬ್ದುಲ್ಲಾ ಹಾಗೂ ಕಾಂಗ್ರೆಸ್ಮುಖಂಡ ಗುಲಾಮ್ ನಬಿ ಆಜಾದ್ ಬಹಿರಂಗಪಡಿಸಿದ್ದಾರೆ, ಎಲ್ಲಾ ಕ್ಷೇತ್ರಗಳಲ್ಲೂ ಗೆಲವು ಪಡೆಯಲೇಬೇಕಾದುದು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳ ಸ್ಥಿತಿಯಾಗಿದೆ. ಆದರೆ, ಅನಂತನಾಗ್ ಮತ್ತು ಬಾರಮುಲ್ಲಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳು ಪರಸ್ಪರ ಪೈಪೋಟಿ ನೀಡುವುದಿಲ್ಲ.ಬದಲಿಗೆ ಇಬ್ಬರದೂ ಸ್ನೇಹಪೂರ್ವಕ ಸ್ಪರ್ಧೆಯಾಗಿದೆ ಎಂದು ತಿಳಿಸಿದ್ದಾರೆ. ಜಮ್ಮು ಮತ್ತು ಉಧಾಂಪುರ್ ಕ್ಷೇತ್ರಗಳನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದ್ದು, ಶ್ರೀನಗರದಲ್ಲಿ ತಾನು ಸ್ಪರ್ಧಿಸುತ್ತಿರುವುದಾಗಿ ಆಜಾದ್ ತಿಳಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಒಟ್ಟು 6 ಕ್ಷೇತ್ರಗಳಿದ್ದು, ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಮಾಡಿಕೊಂಡಿದ್ದು ಗೆಲುವಿಗಾಗಿ ಹಲವು ತಂತ್ರಗಳನ್ನ ರೂಪಿಸುತ್ತಿವೆ.
ಕೇರಳದಲ್ಲಿ ಪ್ರಾದೇಶಿಕ ಪಕ್ಷಗಳೊಡನೆ ಬಿಜೆಪಿ ಮೈತ್ರಿ
ಉತ್ತರದಲ್ಲಿ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದ್ದರೆ, ಕೇರಳದಲ್ಲಿ 20 ಲೋಕಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇಲ್ಲಿಯೂ ಅತಿ ಹೆಚ್ಚಿನ ಸ್ಥಾನ ಪಡೆಯಲು ಬಿಜೆಪಿ ಕೇರಳ ಪ್ರಾದೇಶಿಕ ಪಕ್ಷವಾದ ಭಾರತ ಧರ್ಮ ಜನ ಸೇನೆ (ಬಿಡಿಜೆಎಸ್), ಕೇರಳ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. 14 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಉಳಿದ ಆರು ಸ್ಥಾನಗಳಲ್ಲಿ ಐದರಲ್ಲಿ ಬಿಡಿಜೆಎಸ್ , ಒಂದು ಸ್ಥಾನದಲ್ಲಿ ಕೇರಳ ಕಾಂಗ್ರೆಸ್ ಪಕ್ಷಗಳು ಸ್ಪರ್ಧಿಸಲಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಮುರಳೀಧರ ರಾವ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.