ADVERTISEMENT

ಮಾನಹಾನಿ ಪ್ರಕರಣ: ದಿಗ್ವಿಜಯ ಸಿಂಗ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಪಿಟಿಐ
Published 22 ಫೆಬ್ರುವರಿ 2021, 15:42 IST
Last Updated 22 ಫೆಬ್ರುವರಿ 2021, 15:42 IST
 ದಿಗ್ವಿಜಯ ಸಿಂಗ್‌ 
 ದಿಗ್ವಿಜಯ ಸಿಂಗ್‌    

ಹೈದರಾಬಾದ್‌: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಕಾಂಗ್ರೆಸ್‌ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್‌ ಅವರ ವಿರುದ್ಧ ಇಲ್ಲಿನ ಸ್ಥಳೀಯ ನ್ಯಾಯಾಲಯ ಜಾಮೀನುರಹಿತ ವಾರಂಟ್‌ ಹೊರಡಿಸಿದೆ.

ಎಐಎಂಐಎಂ ಪಕ್ಷದ ಮುಖಂಡ ಎಸ್‌.ಎ. ಹುಸೈನ್‌ ಅನ್ವರ್‌ ಅವರು ನೀಡಿದ ದೂರಿನ ಅನ್ವಯ 2017ರಲ್ಲಿ ದಿಗ್ವಿಜಯ ಸಿಂಗ್‌ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿತ್ತು.

‘ಹೈದರಾಬಾದ್‌ನ ಸಂಸದರ ಪಕ್ಷವು ಹಣಕ್ಕಾಗಿ ಇತರ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ’ ಎಂಬ ಹೇಳಿಕೆ ನೀಡುವ ಮೂಲಕ ಸಿಂಗ್‌ ಅವರು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಅವರನ್ನು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ADVERTISEMENT

‘ತಮ್ಮ ಹೇಳಿಕೆಗೆ ಕ್ಷಮೆ ಕೋರಬೇಕೆಂದು ದಿಗ್ವಿಜಯ ಸಿಂಗ್‌ ಅವರಿಗೆ ಹಾಗೂ ಈ ಹೇಳಿಕೆಯನ್ನೊಳಗೊಂಡ ಲೇಖನ ಪ್ರಕಟಿಸಿದ್ದ ಉರ್ದು ಪತ್ರಿಕೆಯ ಸಂಪಾದಕರಿಗೆ ನೋಟಿಸ್‌ ಕಳುಹಿಸಲಾಗಿತ್ತು. ಆದರೆ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ’ ಎಂದು ಹುಸೈನ್‌ ಅನ್ವರ್‌ ಪರ ವಕೀಲರು ತಿಳಿಸಿದ್ದಾರೆ.

ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗದ ಕಾರಣ ವಿನಾಯಿತಿ ನೀಡಬೇಕೆಂದು ಕೋರಿ ಸಿಂಗ್‌ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ, ಜಾಮೀನು ರಹಿತ ವಾರಂಟ್‌ ಹೊರಡಿಸಿದೆ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.