ನವದೆಹಲಿ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಸುಮಾರು 50 ನಿಮಿಷಗಳವರೆಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ, ರಾಷ್ಟ್ರೀಯ ಹಿತಾಸಕ್ತಿಯ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾಗಿ ಪವಾರ್ ಸ್ಪಷ್ಟಪಡಿಸಿದ್ದಾರೆ.
ದೇಶದ ಕೋವಿಡ್–19 ಪರಿಸ್ಥಿತಿ ಹಾಗೂ ಲಸಿಕಾ ಅಭಿಯಾನ, ಕೇಂದ್ರ ಸರ್ಕಾರ ಹೊಸದಾಗಿ ರಚಿಸಿರುವ ಸಹಕಾರ ಸಚಿವಾಲಯದ ವಿಷಯವು ಸಭೆಯಲ್ಲಿ ಚರ್ಚೆಗೆ ಬಂದಿತು. ನಿರ್ದೇಶಕರ ಮಂಡಳಿಯನ್ನು ಸೂಪರ್ಸೀಡ್ ಮಾಡುವುದು ಸೇರಿದಂತೆ ನಗರ ಸಹಕಾರಿ ಬ್ಯಾಂಕ್ಗಳ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮೇಲ್ವಿಚಾರಣೆ ಬಗ್ಗೆ ಪವಾರ್ ಅವರು ಕಳವಳ ವ್ಯಕ್ತಪಡಿಸಿದರು ಎನ್ನಲಾಗಿದೆ.
‘ಮಹಾರಾಷ್ಟ್ರ ವಿಕಾಸ್ ಅಗಾಡಿ’ ಮೈತ್ರಿಕೂಟದಲ್ಲಿ ಉಂಟಾಗಿದೆ ಎನ್ನಲಾದ ವೈಮನಸ್ಯದ ವದಂತಿ ಹಿನ್ನೆಲೆಯಲ್ಲಿ ಪವಾರ್ –ಮೋದಿ ಭೇಟಿಯಾಗಿದ್ದಾರೆ ಎಂಬುದನ್ನು ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಅಲ್ಲಗಳೆದಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಲಿಕ್, ಪವಾರ್ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಭೇಟಿಯನ್ನೂ ಅಲ್ಲಗಳೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.