
ಶರದ್, ಸುನೇತ್ರಾ, ಸುಪ್ರಿಯಾ
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾದ ಬಳಿಕ ಅಜಿತ್ ಪವಾರ್ ಬಣ ಶರದ್ ಪವಾರ್ ನೇತೃತ್ವದ ಎನ್ಸಿಪಿಯೊಂದಿಗೆ ವಿಲೀನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಒಂದೊಮ್ಮೆ ಅಜಿತ್ ನೇತೃತ್ವದ ಎನ್ಸಿಪಿ, ಶರದ್ ಬಣದೊಂದಿಗೆ ವಿಲೀನವಾದರೂ ಮಹಾಯುತಿ ಸರ್ಕಾರಕ್ಕೆ ಯಾವುದೇ ತೊಂದರೆಯಾಗದು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ಬಿಜೆಪಿ 132, ಶಿವಸೇನೆ (ಶಿಂದೆ) 56, ಎನ್ಸಿಪಿ 41 ಸ್ಥಾನಗಳನ್ನು ಗೆದ್ದಿತ್ತು. ಈ ಮೂಲಕ ಮಹಾಯುತಿ ಸರ್ಕಾರ ಅಧಿಕಾರ ರಚನೆಯಾಗಿತ್ತು.
ಎನ್ಸಿಪಿ ವಿಲೀನವಾದರೂ ಬಹುಮತಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಸರಳ ಬಹುಮತಕ್ಕೆ 145 ಸ್ಥಾನಗಳು ಬೇಕಿರುವುದರಿಂದ ಬಿಜೆಪಿ ಮತ್ತು ಶಿವಸೇನೆ (ಶಿಂದೆ) ಸೇರಿದರೆ 188 ಸ್ಥಾನಗಳಾಗಲಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಒಂದು ವೇಳೆ ಅಜಿತ್ ಬಣ ವಿಲೀನಗೊಳ್ಳದೆ ಸ್ವತಂತ್ರವಾಗಿ ಉಳಿದರೆ ಅಜಿತ್ ಪವಾರ್ ಅವರ ಉತ್ತರಾಧಿಕಾರಿ ಯಾರಾಗಲಿದ್ದಾರೆ? ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗಳು ಮೂಡುತ್ತವೆ.
ಬಲ್ಲಮೂಲಗಳ ಪ್ರಕಾರ ಅಜಿತ್ ಪವಾರ್ ಪತ್ನಿ, ರಾಜ್ಯಸಭಾ ಸದಸ್ಯೆ ಸುನೇತ್ರಾ ಪವಾರ್ ಅವರಿಗೆ ಪಕ್ಷದ ಜವಾಬ್ದಾರಿ ಕೊಡಬಹುದು ಎನ್ನಲಾಗಿದೆ. ಅವರೇ ಉಪಮುಖ್ಯಮಂತ್ರಿಯಾಗಲಿದ್ದು, ಬಾರಾಮತಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಸುನೇತ್ರಾ ಅವರು ಮಹಾರಾಷ್ಟ್ರ ರಾಜಕಾರಣಕ್ಕೆ ಪ್ರವೇಶ ಮಾಡಬೇಕು ಎಂಬುದು, ಬಹುತೇಕ ಎನ್ಸಿಪಿ ನಾಯಕರ ಆಶಯವಾಗಿದೆ. ಮಹಾರಾಷ್ಟ್ರ ರಾಜಕಾರಣದಲ್ಲಿ ಪತಿಯ ಸ್ಥಾನವನ್ನು ತುಂಬಲಿದ್ದಾರಾ ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.
ಸುನೇತ್ರಾ ಪಕ್ಷದ ಅಧ್ಯಕ್ಷ ಸ್ಥಾನ ನಿರಾಕರಿಸಿದರೆ ಹಿರಿಯ ನಾಯಕ ಹಾಗೂ ಸಚಿವರಾದ ಛಗನ್ ಭುಜಬಲ್, ಪ್ರಫುಲ್ ಪಟೇಲ್, ಸುನಿಲ್ ತಟ್ಕರೆ ಅವರಿಗೆ ಅಧ್ಯಕ್ಷ ಪಟ್ಟ ನೀಡಬಹುದು. ಇವರಲ್ಲಿ ಒಬ್ಬರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.