ಮುಂಬೈ: ‘ಮಹಾರಾಷ್ಟ್ರ ವಿಕಾಸ್ ಆಘಾಡಿ (ಎಂವಿಎ) ಸರ್ಕಾರ ಸ್ಥಿರವಾಗಿದ್ದು, ತನ್ನ ಅವಧಿಯನ್ನು ಪೂರ್ಣಗೊಳಿಸುವುದು’ ಎಂದು ಎನ್ಸಿಪಿ ಮಂಗಳವಾರ ಹೇಳಿದೆ.
ಎಂವಿಎ ಅಂಗ ಪಕ್ಷ ಆಗಿರುವ ಎನ್ಸಿಪಿಯ ಮುಖಂಡ ಹಾಗೂ ಸಚಿವ ನವಾಬ್ ಮಲಿಕ್, ‘ಮೈತ್ರಿಕೂಟದ ಮೂರೂ ಪಕ್ಷಗಳು ಒಗ್ಗಟ್ಟಾಗಿದ್ದು, ಸರ್ಕಾರ ಸದೃಢವಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗುತ್ತದೆ ಎಂಬ ವದಂತಿ ಹಬ್ಬಿಸುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ’ ಎಂದು ಟಿ.ವಿ. ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಟೀಕಿಸಿದ್ದಾರೆ.
‘ಕೋವಿಡ್–19 ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಚಾಚೂತಪ್ಪದೇ ಪಾಲಿಸುತ್ತಿದೆ. ಕೊರೊನಾ ವೈರಸ್ ಸೋಂಕು ಪತ್ತೆ ಹಚ್ಚಲು ದೇಶದಲ್ಲಿಯೇ ಗರಿಷ್ಠ ಪರೀಕ್ಷೆ ನಡೆಸಿದ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ’ ಎಂದೂ ಹೇಳಿದರು.
ರಾಜ್ಯಪಾಲ ಬಿ.ಎಸ್.ಕೋಶ್ಯಾರಿ ಅವರನ್ನು ಸೋಮವಾರ ಭೇಟಿ ಮಾಡಿದ್ದ ಬಿಜೆಪಿಯ ರಾಜ್ಯಸಭಾ ಸದಸ್ಯ ನಾರಾಯಣ ರಾಣೆ, ‘ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು’ ಎಂದು ಮನವಿ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.