ನವದೆಹಲಿ: ನೈರುತ್ಯ ದೆಹಲಿಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ದೆಹಲಿ ಪೊಲೀಸರನ್ನು ಕೇಳಿದೆ.
ಈ ಕುರಿತು ನೈರುತ್ಯ ದೆಹಲಿಯ ಪೊಲೀಸ್ ಉಪ ಆಯುಕ್ತರಿಗೆ ಪತ್ರ ಬರೆದಿರುವ ಆಯೋಗ, ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಪತ್ರದಲ್ಲಿ ಕೇಳಿದೆ.
ಈ ಪ್ರಕರಣದ ತನಿಖೆಯ ವೇಳೆ ಸಂತ್ರಸ್ತೆಯ ಗುರುತನ್ನು ಬಹಿರಂಪಡಿಸಬಾರದು. ಹಾಗೆಯೇ ಈ ಘಟನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ವಿವರವಾದ ವರದಿಯ ಜೊತೆಗೆ, ಸಂತ್ರಸ್ತೆಯ ವಯಸ್ಸಿನ ದಾಖಲಾತಿ, ಎಫ್ಐಆರ್ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿಯಂತಹ ದಾಖಲೆಗಳನ್ನು 48 ಗಂಟೆಗಳ ಒಳಗೆ ಆಯೋಗಕ್ಕೆ ಸಲ್ಲಿಸುವಂತೆ ಪತ್ರದಲ್ಲಿ ವಿನಂತಿಸಲಾಗಿದೆ.
ಪೊಲೀಸರ ಪ್ರಕಾರ, ಶಂಕಾಸ್ಪದ ರೀತಿಯಲ್ಲಿ ದಲಿತ ಬಾಲಕಿ ಸತ್ತಿದ್ದು, ಚಿತಾಗಾರದಲ್ಲಿದ್ದ ಪೂಜಾರಿಯೇ ಬಲವಂತವಾಗಿ ಶವವನ್ನು ಸುಟ್ಟು ಹಾಕಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.