ಕೋಲ್ಕತ್ತ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂ ಕಬಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತೀವ್ರ ಪ್ರತಿಭಟನೆಗಳು ನಡೆದಿದ್ದ ಪಶ್ಚಿಮ ಬಂಗಾಳದ ಸಂದೇಶ್ಖಾಲಿಗೆ ಇಂದು (ಸೋಮವಾರ) ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಭೇಟಿ ನೀಡಿದ್ದಾರೆ.
ಇದೇ ವೇಳೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರೇಖಾ ಶರ್ಮಾ ಅವರು ಖುದ್ದಾಗಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂದೇಶ್ಖಾಲಿಯಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲಾಗಿದೆ. ಇದರಿಂದಾಗಿ ಸಂತ್ರಸ್ತರು ಭಯಭೀತರಾಗಿದ್ದು, ಇಲ್ಲಿನ ಪರಿಸ್ಥಿತಿ ಕೆಟ್ಟದಾಗಿದೆ. ಮಹಿಳೆಯರು ನನ್ನ ಬಳಿ ತಮ್ಮ ಅಳಲು ತೊಡಿಕೊಂಡಿದ್ದಾರೆ. ಇಂದು ನನ್ನ ಬಳಿ 2 ಅತ್ಯಾಚಾರ ಮತ್ತು ಕಿರುಕುಳ ಸೇರಿದಂತೆ ಒಟ್ಟು 18 ದೂರುಗಳು ಬಂದಿವೆ’ ಎಂದು ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟು ಇಲ್ಲಿಗೆ ಬಂದರೆ, ಅವರಿಗೆ ಇಲ್ಲಿನ ಮಹಿಳೆಯರ ನೋವು ಅರ್ಥವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಟಿಎಂಸಿ ಮುಖಂಡ ಶಹಜಹಾನ್ ಶೇಖ್ ಅವರನ್ನು ಮಮತಾ ಬ್ಯಾನರ್ಜಿ ರಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಇತ್ತೀಚೆಗೆ ಸಂದೇಶ್ಖಾಲಿಗೆ ಭೇಟಿ ನೀಡಲು ಬಂದಿದ್ದ ಕೇಂದ್ರ ಸಚಿವರನ್ನು ಒಳಗೊಂಡಿದ್ದ ಬಿಜೆಪಿ ನಿಯೋಗಕ್ಕೆ ಸ್ಥಳೀಯ ಆಡಳಿತ ತಡೆಯೊಡ್ಡಿತ್ತು.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂ ಕಬಳಿಕೆ ಆರೋಪಗಳು ವ್ಯಕ್ತವಾದ ಬಳಿಕ ಸಂದೇಶ್ಖಾಲಿಯ ಗ್ರಾಮಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಇದಾದ ಬಳಿಕ ಇಲ್ಲಿನ 19 ಸ್ಥಳಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.