ADVERTISEMENT

ಅಕ್ರಮ ವಲಸಿಗರ ಗಡಿಪಾರು: ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸೂಚನೆ

ಪಿಟಿಐ
Published 4 ಡಿಸೆಂಬರ್ 2019, 18:30 IST
Last Updated 4 ಡಿಸೆಂಬರ್ 2019, 18:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಅಕ್ರಮ ವಲಸಿಗರನ್ನು ಗುರುತಿಸಿ, ಅವರನ್ನು ದೇಶದಿಂದ ಗಡಿಪಾರು ಮಾಡಲು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ’ ಎಂದು ಕೇಂದ್ರ ಸರ್ಕಾರವು ರಾಜ್ಯಸಭೆಗೆ ಮಾಹಿತಿ ನೀಡಿದೆ.

ರಾಜ್ಯಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸುವ ವೇಳೆ, ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಈ ಮಾಹಿತಿ ನೀಡಿದ್ದಾರೆ.

‘ಅಕ್ರಮ ವಲಸಿಗರನ್ನು ಗುರುತಿಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ. ಆ ಅಧಿಕಾರವನ್ನು ಬಳಸುವಂತೆ ಸೂಚನೆ ನೀಡಲಾಗಿದೆ. ದೇಶದಾದ್ಯಂತ ಈ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಸೂಚನೆಗಳು

* ಗುಪ್ತಚರ ಸಂಸ್ಥೆ ಮತ್ತು ಇತರ ಭದ್ರತಾ ಸಂಸ್ಥೆಗಳ ನೆರವು ಪಡೆದು ಅಕ್ರಮ ವಲಸಿಗರನ್ನು ಗುರುತಿಸಲು ಕ್ರಮ ತೆಗೆದುಕೊಳ್ಳಬೇಕು

* ಅಕ್ರಮ ವಲಸಿಗರನ್ನು ಪತ್ತೆ ಮಾಡಿ, ಅವರನ್ನು ವಶಕ್ಕೆ ಪಡೆಯಬೇಕು. ಅವರ ಜೈವಿಕ ವಿವರಗಳನ್ನು ಸಂಗ್ರಹಿಸಬೇಕು

* ಅಕ್ರಮ ವಲಸಿಗರ ಹೊಂದಿರುವ ಯಾವುದೇ ರೀತಿಯ ಗುರುತಿನ ಚೀಟಿಗಳನ್ನು (ಆಧಾರ್‌, ಮತದಾರರ ಚೀಟಿ, ಪಡಿತರ ಚೀಟಿ, ಚಾಲನಾ ಪರವಾನಗಿ) ವಶಕ್ಕೆ ಪಡೆದು, ಅವುಗಳನ್ನು ರದ್ದುಪಡಿಸಬೇಕು

* ಈ ಗುರುತಿನ ಚೀಟಿಗಳು ಮತ್ತು ಅಕ್ರಮ ವಲಸಿಗರ ಜೈವಿಕ ವಿವರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಅಕ್ರಮವಾಗಿ ಗುರುತಿನ ಚೀಟಿ ಪಡೆದುಕೊಂಡದ್ದರ ಸಂಬಂಧ ಕಾನೂನು ಕ್ರಮ ತೆಗೆದುಕೊಳ್ಳಬೇಕು

* ವಶಕ್ಕೆ ಪಡೆದವರನ್ನು ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆಗೆ ಚಾಲನೆ ನೀಡಬೇಕು

ಅಂಕಿ–ಅಂಶ

* 29 ಲಕ್ಷ – 2008–2013ರ ಅವಧಿಯಲ್ಲಿ ಭಾರತಕ್ಕೆ ಬಂದಿರುವ ಅಕ್ರಮ ವಲಸಿಗರ ಸಂಖ್ಯೆ

* 56 ಲಕ್ಷ – 2014–2017ರ ಅವಧಿಯಲ್ಲಿ ಭಾರತಕ್ಕೆ ಬಂದಿರುವ ಅಕ್ರಮ ವಲಸಿಗರ ಸಂಖ್ಯೆ

* 59 – ಕರ್ನಾಟಕದಲ್ಲಿರುವ ಅಕ್ರಮ ವಲಸಿಗರ ಸಂಖ್ಯೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.