ಅಣ್ಣಾಮಲೈ
ಚೆನ್ನೈ: ಮುಂಬರುವ ಫೆಬ್ರುವರಿ 5ರಂದು ನಿಗದಿಯಾಗಿರುವ ತಮಿಳುನಾಡು ಈರೋಡ್ ಪೂರ್ವ ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.
ಭಾನುವಾರ ನಡೆದ ಪಕ್ಷದ ರಾಜ್ಯ ಕಾರ್ಯಕಾರಿ ವರ್ಚುವಲ್ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು.
ಈ ಕ್ಷೇತ್ರ ಪ್ರತಿನಿಧಿಸಿದ್ದ ಕಾಂಗ್ರೆಸ್ನ ಇವಿಕೆಎಸ್ ಇಳಾಂಗೋವನ್ ಅವರ ನಿಧನದಿಂದ ಉಪ ಚುನಾವಣೆ ಘೋಷಣೆಯಾಗಿದೆ.
ಡಿಎಂಕೆ–ಕಾಂಗ್ರೆಸ್ ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ, ದುರಾಡಳಿತದಲ್ಲಿ ಮುಳುಗಿದೆ. ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಲು ಎಲ್ಲ ತಯಾರಿ ಮಾಡಿಕೊಂಡಿದೆ. ಹೀಗಾಗಿ ನಾವು ಮುಂಬರುವ (2026) ಸಾರ್ವತ್ರಿಕ ಚುನಾವಣೆಯಲ್ಲಿ ಡಿಎಂಕೆಯನ್ನು ಮನೆಗೆ ಕಳುಹಿಸುವ ಕೆಲಸದಲ್ಲಿ ತಲ್ಲೀನರಾಗುತ್ತೇವೆ. ಈ ಉಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.
ಈರೋಡ್ ಪೂರ್ವ ವಿಧಾನಸಭೆ ಉಪ ಚುನಾವಣೆಗೆ ಡಿಎಂಕೆ ಮೈತ್ರಿ ಅಭ್ಯರ್ಥಿಯಾಗಿ ವಿ.ಸಿ. ಚಂದ್ರಕುಮಾರ್ ಎನ್ನುವರ ಹೆಸರನ್ನು ಘೋಷಣೆ ಮಾಡಿದೆ.
ಈಗಾಗಲೇ ಎಐಎಡಿಎಂಕೆ ಸಹ ಈ ಉಪ ಚುನಾವಣೆಯನ್ನು ಬಹಿಷ್ಕರಿಸಿದೆ. ಮುಂದಿನ ವರ್ಷಾಂತ್ಯಕ್ಕೆ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.