ಜಮ್ಮು : ಗಡಿ ಪ್ರದೇಶದ ನಿವಾಸಿಗಳ ಸುರಕ್ಷತೆಗೆ ಭೂಗತ ಬಂಕರ್ ನಿರ್ಮಾಣಕ್ಕೆ ಕೇಂದ್ರದಿಂದ ಬಿಡುಗಡೆಯಾದ ಅನುದಾನದಲ್ಲಿ ಅರ್ಧದಷ್ಟನ್ನೂ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬಳಸಿಕೊಂಡಿಲ್ಲ ಎಂಬ ಸಂಗತಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿದ್ದ ಅರ್ಜಿಯಿಂದ ತಿಳಿದುಬಂದಿದೆ.
ಪಾಕಿಸ್ತಾನದೊಂದಿಗಿನ ಸೇನಾ ಸಂಘರ್ಷ, ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಸೇರಿದಂತೆ ಗಡಿಯಲ್ಲಿ ಬಿಗುವಿನ ವಾತಾವರಣ ಇರುವ ಸಂದರ್ಭದಲ್ಲಿ, ಗಡಿ ಪ್ರದೇಶದ ನಿವಾಸಿಗಳ ಸುರಕ್ಷತೆಗೆ ಕೇಂದ್ರ ಬಿಡುಗಡೆ ಮಾಡಿರುವ ಅನುದಾನವೂ ಸದ್ಭಳಕೆಯಾಗುತ್ತಿಲ್ಲ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.
‘2020ರಿಂದ 2025ರ ಅವಧಿಯಲ್ಲಿ ಭೂಗತ ಬಂಕರ್ ನಿರ್ಮಾಣಕ್ಕಾಗಿ ಕೇಂದ್ರದಿಂದ ₹242.77 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಶೇ 46.58ರಷ್ಟು ಹಣ ಬಳಕೆಯಾಗದೆ ಉಳಿದಿದೆ’ ಎಂದು ರಮನ್ ಕುಮಾರ್ ಎಂಬುವರು ಆರ್ಟಿಐನಡಿ ಸಲ್ಲಿಸಿದ್ದ ಅರ್ಜಿಗೆ ಜಮ್ಮು ಮತ್ತು ಕಾಶ್ಮೀರದ ಗೃಹ ಇಲಾಖೆ ಮಾಹಿತಿ ನೀಡಿದೆ.
ಭಾರತವು ಪಾಕಿಸ್ತಾನದೊಂದಿಗೆ 3,323 ಕಿ.ಮೀ. ಗಡಿಯನ್ನು ಹಂಚಿಕೊಂಡಿದ್ದು, ಇದರಲ್ಲಿ 221 ಕಿ.ಮೀ ಅಂತರರಾಷ್ಟ್ರೀಯ ಗಡಿ (ಐಬಿ), 744 ಕಿ.ಮೀ. ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಜಮ್ಮು ಮತ್ತು ಕಾಶ್ಮೀರದ ವ್ಯಾಪ್ತಿಗೆ ಬರುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.