ಮದುರೆ: ವೈದ್ಯಕೀಯ ಕೋರ್ಸ್ ಆಕಾಂಕ್ಷಿ, 19 ವರ್ಷದ ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜ್ಯೋತಿಶ್ರೀ ದುರ್ಗಾ ಆತ್ಮಹತ್ಯೆ ಮಾಡಿಕೊಂಡವರು.ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಭಯದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೂ ಮುನ್ನ ಬರೆದಿದ್ದು ಎನ್ನಲಾದ ಮರಣಪತ್ರ ಘಟನಾ ಸ್ಥಳದಲ್ಲಿ ಸಿಕ್ಕಿದೆ. ‘ಹೆತ್ತವರು ನನ್ನ ಮೇಲೆ ತುಂಬಾ ಭರವಸೆ ಇಟ್ಟಿದ್ದಾರೆ. ನನಗೆ ಭಯವಾಗುತ್ತಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ’ ಎಂದೂ ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಬಗ್ಗೆ ದಿಗ್ಬ್ರಮೆ ವ್ಯಕ್ತಪಡಿಸಿರುವ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ‘ವಿದ್ಯಾರ್ಥಿಗಳು ಎಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸವು ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಪೋಷಕರೂ ಅವರಿಗೆ ಮಾರ್ಗದರ್ಶನ ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
‘ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. 2017ರಲ್ಲಿ ನೀಟ್ ಆಕಾಂಕ್ಷಿ ಅನಿತಾ, ಈಗ ಜ್ಯೋತಿಶ್ರೀ ದುರ್ಗಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಮೇಲೆನೀಟ್ ತೀವ್ರ ಪರಿಣಾಮ ಬೀರುತ್ತಿದೆ. ನೀಟ್ ನಿಷೇಧಿಸಿ, ತಮಿಳುನಾಡಿನ ವಿದ್ಯಾರ್ಥಿಗಳನ್ನು ಉಳಿಸಿ’ ಎಂದೂ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ತಮಿಳುನಾಡಿನ ವಿವಿಧ ರಾಜಕೀಯ ಮುಖಂಡರು ಸಹ ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ನೀಟ್ ರದ್ದುಪಡಿಸುವಂತೆ ಕೇಂದ್ರವನ್ನು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.