ನವದೆಹಲಿ: ಇಬ್ಬರು ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ನಿರ್ದೇಶಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಪಡಿಸಿತು.
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು. ‘ಆ ಇಬ್ಬರು ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆ ಬಗ್ಗೆ ಅನುಕಂಪ ಇದೆ. ಆದರೆ, ಅವರಿಬ್ಬರಿಗಾಗಿಯೇ ಮರು ಪರೀಕ್ಷೆ ನಡೆಸುವಂತೆ ಎನ್ಟಿಎಗೆ ನಿರ್ದೇಶನ ನೀಡಿ ಆದೇಶಿಸಲಾಗದು’ ಎಂದು ಸ್ಪಷ್ಟಪಡಿಸಿತು.
ವೈಷ್ಣವಿ ಭೋಪಾಲೆ ಹಾಗೂ ಅಭಿಷೇಕ್ ಶಿವಾಜಿ ಎಂಬ ವಿದ್ಯಾರ್ಥಿಗಳು ಮಹಾರಾಷ್ಟ್ರದ ಪರೀಕ್ಷಾ ಕೇಂದ್ರವೊಂದರಲ್ಲಿ ನೀಟ್ ಬರೆದಿದ್ದರು. ಅವರ ಪ್ರಶ್ನೆಪತ್ರಿಕೆಗಳು ಹಾಗೂ ಒಎಂಆರ್ ಪ್ರತಿಗಳು ಪರೀಕ್ಷೆ ಆರಂಭಕ್ಕೂ ಮೊದಲೇ ಬೆರೆತುಹೋಗಿದ್ದವು.
ತಮಗೆ ಮತ್ತೊಮ್ಮೆ ನೀಟ್ ಬರೆಯಲು ಅವಕಾಶ ಕಲ್ಪಿಸುವಂತೆ ಕೋರಿ ಈ ಇಬ್ಬರು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಎನ್ಟಿಎ ನಿರ್ದೇಶಿಸಿ ಅಕ್ಟೋಬರ್ 20ರಂದು ಆದೇಶಿಸಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಎನ್ಟಿಎ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.