ಕೋಲ್ಕತ್ತಾ: ನೇಪಾಳದಾದ್ಯಂತ ‘ಜೆನ್–ಝೀ’ ಬ್ಯಾನರ್ ಅಡಿಯಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದು, ಗಡಿ ಭಾಗದಲ್ಲಿ ಬಂಗಾಳಿಗರು ಶಾಂತಿಯಿಂದ ಇರುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮನವಿ ಮಾಡಿದ್ದಾರೆ.
ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನಂತರ ಅಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಅಲ್ಲಿನ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
‘ನಾವು ನಮ್ಮ ನೆರೆಯ ದೇಶಗಳಾದ ನೇಪಾಳ, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳನ್ನು ಪ್ರೀತಿಸುತ್ತೇವೆ. ಆದರೆ, ಅಲ್ಲಿನ ತೊಂದರೆಗಳು ನಮಗೆ ಸಂಬಂಧಿಸಿದ್ದಲ್ಲ. ನಾವು ಮಧ್ಯ ಪ್ರವೇಶಿಸಲು ಕೂಡ ಸಾಧ್ಯವಿಲ್ಲ. ನೇಪಾಳದ ಗಡಿಯಲ್ಲಿರುವ ಪ್ರದೇಶಗಳಲ್ಲಿ ಜನರು ಶಾಂತಿಯಿಂದ ಇರುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.
ವಿದೇಶಾಂಗ ನೀತಿಯು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ನೇಪಾಳದೊಂದಿಗಿನ ರಾಜತಾಂತ್ರಿಕ ಸಂಬಂಧದ ಬಗ್ಗೆ ಗಮನಹರಿಸಲಿ. ನಮ್ಮ ನೆರೆಯ ದೇಶದಲ್ಲಿ ನಾವು ಶಾಂತಿಯನ್ನು ಬಯಸುತ್ತೇವೆ ಎಂದು ತಿಳಿಸಿದ್ದಾರೆ.
ನೇಪಾಳದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ದಯವಿಟ್ಟು ಪತ್ರಕರ್ತರು ನಿಮ್ಮ ಜೀವವನ್ನು ಪಣಕ್ಕಿಟ್ಟು ವರದಿ ಮಾಡಲು ಅಲ್ಲಿಗೆ ತೆರಳಬೇಡಿ. ಒಂದು ವೇಳೆ ತೆರಳಲೇಬೇಕಾದರೆ, ಪೊಲೀಸರಿಗೆ ಮೊದಲೇ ಮಾಹಿತಿ ನೀಡಿ ಎಂದು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.