ನವದೆಹಲಿ: ಪ್ರಸಕ್ತಸಾಲಿನ 12ನೇ ತರಗತಿಯ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸಬೇಕು ಎಂದು ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ (ಸಿಬಿಎಸ್ಇ) ಸಲಹೆ ನೀಡಿರುವ ಸುಪ್ರೀಂ ಕೋರ್ಟ್, ವಿಶೇಷ ಸಂದರ್ಭವಾಗಿರುವ ಕಾರಣ ಈ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಸೂಚಿಸಿದೆ.
ಇದೇ ವೇಳೆ, 2020–21ನೇ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ಅಕ್ಟೋಬರ್ 31ರೊಳಗೆ ಪೂರ್ಣಗೊಳಿಸುವುದು ಹಾಗೂ ನವೆಂಬರ್ 1ರಿಂದಮೊದಲ ವರ್ಷದ (ಪ್ರಥಮ ಸೆಮಿಸ್ಟರ್) ತರಗತಿ ಆರಂಭಿಸಬೇಕು ಎಂಬ ಯುಜಿಸಿಯ ನಿರ್ಧಾರವನ್ನು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮಂಗಳವಾರದಿಂದ (ಸೆ. 22) ಆರಂಭವಾಗಿರುವ ಪೂರಕ ಪರೀಕ್ಷೆಗಳು ಇದೇ 29ರವರೆಗೆ ನಡೆಯಲಿದ್ದು, ಎರಡು ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಈ ವಿದ್ಯಾರ್ಥಿಗಳ ಶೈಕ್ಷಣಿಕ ಅವಧಿಗೆ ಧಕ್ಕೆ ಆಗದಂತೆ ಕ್ರಮವಹಿಸಬೇಕು ಎಂದು ಸುಪ್ರೀಂಕೋರ್ಟ್ ಯುಜಿಸಿ ಮತ್ತು ಸಿಬಿಎಸ್ಇಗೆ ತಿಳಿಸಿದೆ.
‘ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಯುಜಿಸಿ ಪ್ರಕಟಿಸಬಹುದು‘ ಎಂದು ಯುಜಿಸಿ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ‘ಇದೇ 24ರವರೆಗೂ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಪ್ರಕಟಿಸಬಾರದು. ಎರಡು ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಅಲ್ಲದೇ, ಈ ವರ್ಷ ವಿಶಿಷ್ಟ ಸನ್ನಿವೇಶ ಎದುರಾಗಿದೆ. ಹೀಗಾಗಿ ಸಿಬಿಎಸ್ಇ ಜೊತೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ’ ಎಂದು ಯುಜಿಸಿಗೆ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.