ನವದೆಹಲಿ: ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸಗಡ ಹಾಗೂ ಮಧ್ಯಪ್ರದೇಶ ರಾಜ್ಯಗಳ ಜನರು ದೆಹಲಿಯನ್ನು ಪ್ರವೇಶಿಸುವ ಮುನ್ನ ಕೊರೊನಾ ಸೋಂಕಿಗೆ ಸಂಬಂಧಿಸಿದ ನೆಗೆಟಿವ್ ವರದಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲು ದೆಹಲಿ ಸರ್ಕಾರ ಮುಂದಾಗಿದೆ.
ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸಲಾಗುತ್ತಿದ್ದು, ಇದು ಮಾರ್ಚ್ 15ರ ವರೆಗೆ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿಯಿಂದಲೇ ಈ ಮಾರ್ಗಸೂಚಿ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
ವಿಮಾನ, ರೈಲು ಹಾಗೂ ರಸ್ತೆ ಮಾರ್ಗದ ಮೂಲಕ ಬಸ್ ಸೇರಿದಂತೆ ಇತರ ವಾಹನಗಳಲ್ಲಿ ಬರುವ ಜನರು ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವ ಮುನ್ನ ನೆಗೆಟಿವ್ ವರದಿಯನ್ನು ತೋರಿಸಿರುವುದು ಕಡ್ಡಾಯವಾಗಲಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಮಂಗಳವಾರ 145 ಹೊಸ ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಕೋವಿಡ್ನಿಂದಾಗಿ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.