ADVERTISEMENT

ಜಮ್ಮು–ಕಾಶ್ಮೀರದಲ್ಲಿ ಭ್ರಷ್ಟಾಚಾರ ಸಹಿಸುವುದಿಲ್ಲ: ಲೆ.ಗವರ್ನರ್‌ ಸಿನ್ಹಾ ಸೂಚನೆ

ಪಿಟಿಐ
Published 8 ಆಗಸ್ಟ್ 2020, 11:42 IST
Last Updated 8 ಆಗಸ್ಟ್ 2020, 11:42 IST
ಮನೋಜ್‌ ಸಿನ್ಹಾ
ಮನೋಜ್‌ ಸಿನ್ಹಾ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರ ರದ್ದುಗೊಳಿಸಿ ವರ್ಷ ಕಳೆದಿದ್ದು, ಇದರ ಬೆನ್ನಲ್ಲೇ ಇಲ್ಲಿನ ಕೇಂದ್ರಾಡಳಿತ ಪ್ರದೇಶದ ಆಡಳಿತಕ್ಕೆ ನೂತನ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಚುರುಕು ಮುಟ್ಟಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ಸಿನ್ಹಾ ನೀಡಿದ್ದಾರೆ.ಕೇಂದ್ರಾಡಳಿತ ಪ್ರದೇಶದ ಆಡಳಿತದಲ್ಲಿರುವ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನು ಶುಕ್ರವಾರ ಸಿನ್ಹಾ ಕರೆದಿದ್ದರು. ಈ ಸಭೆಯಲ್ಲಿಯುವಕರನ್ನು ಕೇಂದ್ರೀಕರಿಸಿರುವ ನೀತಿ ಹಾಗೂ ಯೋಜನೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ವ್ಯವಸ್ಥೆ, ಅತ್ಯಾಧುನಿಕ ಆರೋಗ್ಯ ವ್ಯವಸ್ಥೆ, ಜಮ್ಮು ಮತ್ತು ಶ್ರೀನಗರದ ರಾಜಧಾನಿಯ ಆಧುನೀಕರಣ, ಮೂಲಸೌಕರ್ಯ ಯೋಜನೆಗಳಿಗೆ ಚುರುಕು, ಜನರ ಸಮಸ್ಯೆಗಳಿಗೆ ತಕ್ಷಣದಲ್ಲೇ ಪರಿಹಾರ ಕಲ್ಪಿಸುವ ವ್ಯವಸ್ಥೆಗೆ ಮತ್ತಷ್ಟು ಚುರುಕು ನೀಡಲು ಅಧಿಕಾರಿಗಳಿಗೆ ಸಿನ್ಹಾ ಸೂಚಿಸಿದ್ದಾರೆ.

ADVERTISEMENT

ಪ್ರವಾಸೋದ್ಯಮಕ್ಕೆ ಒತ್ತು: ಹೆಚ್ಚಿನ ಬೇಡಿಕೆ ಇರುವ ಸಾಂಪ್ರದಾಯಿಕ ಕರಕೌಶಲಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ಹೆಚ್ಚಿನ ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಕೆರೆಗಳು ಮತ್ತು ಪ್ರವಾಸಿ ತಾಣಗಳ ಪುನರುಜ್ಜೀವನಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.