ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಭೂಮಿ, ಬಂಡವಾಳ ಮತ್ತು ಡಿಜಿಟಲ್ ಮೂಲಸೌಕರ್ಯ ಕ್ಷೇತ್ರದಲ್ಲಿ ಹೊಸ ಸುಧಾರಣೆ ಕ್ರಮಗಳಿಗೆ ಮುಂದಾಗಲಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
‘ವಿಕಸಿತ ಭಾರತ@2047’ ಕುರಿತ ವಿಚಾರಸಂಕಿರಣದಲ್ಲಿ ಮಾತನಾಡಿದ ಅವರು, ‘ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು ಈ ಕ್ಷೇತ್ರಗಳು ನಿರ್ಣಾಯಕವಾಗಲಿವೆ’ ಎಂದು ಪ್ರತಿಪಾದಿಸಿದರು. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ಒಕ್ಕೂಟವು ಈ ವಿಚಾರಸಂಕಿರಣವನ್ನು ಆಯೋಜಿಸಿತ್ತು.
ಎನ್ಡಿಎ ಅಧಿಕಾರಕ್ಕೆ ಮರಳಿದರೆ ಭೂಮಿ, ಬಂಡವಾಳ ಮತ್ತು ಕಾರ್ಮಿಕ ಕ್ಷೇತ್ರಗಳಿಗೆ ಉನ್ನತ ಆದ್ಯತೆ ಸಿಗಲಿದೆ. ಈ ಸಾಂಪ್ರದಾಯಿಕ ಕ್ಷೇತ್ರಗಳನ್ನು ಹೊರತುಪಡಿಸಿ, ಡಿಜಿಟಲ್ ಮೂಲಸೌಕರ್ಯವು ಉತ್ಪಾದನೆಯ ಆಧುನಿಕ ವಲಯವಾಗಿ ಬೆಳೆಯಲಿದೆ ಎಂದು ಅವರು ಹೇಳಿದರು.
ಕಳೆದ 10 ವರ್ಷಗಳ ಅವಧಿಯಲ್ಲಿ ನಿರ್ದಿಷ್ಟ ಕ್ಷೇತ್ರಗಳನ್ನು ಗುರಿಯಾಗಿಸಿ ವ್ಯವಸ್ಥಿತವಾಗಿ ಸುಧಾರಣೆಗಳಾಗಿವೆ. ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯಲ್ಲಿಯೂ ಈ ಸುಧಾರಣಾ ಕ್ರಮಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.