ಪ್ರಾತಿನಿಧಿಕ ಚಿತ್ರ
ಪಿಟಿಐ ಚಿತ್ರ
ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದ ವೇಳೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಘಟನಾ ಸ್ಥಳಕ್ಕೆ ಭೇಟಿ ನೀಡಿದೆ.
ಈ ನಡುವೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ನೂರಾರು ಮಹಿಳೆಯರು ರಕ್ಷಣೆಗಾಗಿ ತಮ್ಮ ಮನೆಗಳನ್ನು ತೊರೆದು ಓಡಿ ಹೋಗಿದ್ದಾರೆ ಎನ್ನಲಾಗಿದೆ.
‘ಸಂತ್ರಸ್ತರನ್ನು ಭೇಟಿ ಮಾಡಲು ಮತ್ತು ಘಟನಾ ಸ್ಥಳದಿಂದ ವರದಿಯಾದ ಸುದ್ದಿಗಳನ್ನು ಪರಿಶೀಲಿಸಲು ಹೋಗುತ್ತಿದ್ದೇನೆ.ಆಸ್ಪತ್ರೆ, ಸಂತ್ರಸ್ತರ ನಿವಾಸಗಳು ಮತ್ತು ಪರಿಹಾರ ಶಿಬಿರಗಳಿಗೆ ಭೇಟಿ ನೀಡುತ್ತೇನೆ. ಕೇಂದ್ರದ ಭದ್ರತಾ ಪಡೆಗಳು ಮತ್ತು ರಾಜ್ಯ ಪೊಲೀಸರು ಶಾಂತಿ ಪುನಃ ಸ್ಥಾಪಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಸಂತ್ರಸ್ತರನ್ನು ಭೇಟಿಯಾದ ನಂತರ, ನಾನು ನನ್ನ ಶಿಫಾರಸುಗಳನ್ನು ಸಲ್ಲಿಸುತ್ತೇನೆ' ಎಂದು ರಾಜ್ಯಪಾಲ ಸಿ.ವಿ.ಆನಂದ ಬೋಸ್ ತಿಳಿಸಿದ್ದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರವಾಸವನ್ನು ಮುಂದೂಡುವಂತೆ ರಾಜ್ಯ ಪಾಲರಿಗೆ ಮನವಿ ಮಾಡಿದ್ದರು. ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರೆ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನವಾಗಬಹುದು ಎಂದು ತಿಳಿಸಿದ್ದರು. ಆದರೆ ಬ್ಯಾನರ್ಜಿ ಅವರ ಮನವಿಯನ್ನು ಧಿಕ್ಕರಿಸಿ ಭೇಟಿ ನೀಡಿದ್ದಾರೆ ಎಂದು ಟಿಎಂಸಿ ಸಂಸದ ಸೌಗತ ರಾಯ್ ಹೇಳಿದ್ದಾರೆ.
ರಾಷ್ಟ್ರೀಯ ಮಹಿಳಾ ಆಯೋಗವು ಹಿಂಸಾಚಾರ ಪಿಡೀತ ಪ್ರದೇಶಗಳಿಗೆ ಭೇಟಿ ಮಾಡಿ, ಸಂತ್ರಸ್ತರ ಜತೆ ಮಾತುಕತೆ ನಡೆಸುತ್ತಿದ್ದು, ವಿವರವಾದ ವರದಿ ಸಲ್ಲಿಸಲು ತನಿಖಾ ಆಯೋಗಕ್ಕೆ ಸೂಚಿಸಲಾಗಿದೆ ಎಂದು ಆಯೋಗದ ಅಧ್ಯಕ್ಷೆ ರಹತ್ಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.