ಶ್ರೀನಗರ: ಜಮಾತ್–ಎ–ಇಸ್ಲಾಮಿ (ಜೆಇಎಲ್) ಸಂಘಟನೆಯ ಹತ್ತಕ್ಕೂ ಹೆಚ್ಚು ಸದಸ್ಯರ ಮನೆಗಳು ಹಾಗೂ ಅವರಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಬುದ್ಗಾಂ, ಬಂಡಿಪೊರಾ ಹಾಗೂ ಇತರ ಜಿಲ್ಲೆಗಳಲ್ಲಿ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯ ಪೊಲೀಸರು ಹಾಗೂ ಸಿಆರ್ಪಿಎಫ್ ಸಿಬ್ಬಂದಿ ಅವರಿಗೆ ನೆರವು ನೀಡಿದ್ದಾರೆ.
ಭಯೋತ್ಪಾದನೆಗೆ ಹಣಕಾಸು ನೆರವು ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಎರಡು ತಿಂಗಳ ಹಿಂದೆ ಜಮಾತ್–ಎ–ಇಸ್ಲಾಮಿ ನಾಯಕರ ಮನೆಗಳು ಹಾಗೂ ಕಚೇರಿಗಳ ಮೇಲೆ ಇದೇ ರೀತಿಯ ದಾಳಿ ನಡೆದಿತ್ತು ಎಂದು ಮೂಲಗಳು ತಿಳಿಸಿವೆ.
ದಾಳಿ ಹಾಗೂ ಶೋಧ ಕಾರ್ಯದ ಬಳಿಕ ಕೆಲವರಿಗೆ ಎನ್ಐಎಯ ದೆಹಲಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.