ನಿಫಾ ವೈರಸ್ (ಪ್ರಾತಿನಿಧಿಕ ಚಿತ್ರ)
ತಿರುವನಂತಪುರ: ರಾಜ್ಯದಲ್ಲಿ ಎರಡು ಶಂಕಿತ ನಿಫಾ ವೈರಾಣು ಪ್ರಕರಣಗಳು ವರದಿಯಾಗಿರುವ ಬೆನ್ನಲ್ಲೇ ಕೇರಳದ ಆರೋಗ್ಯ ಇಲಾಖೆಯು ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಲ್ಲಿನ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೋಯಿಕ್ಕೋಡ್ ಮತ್ತು ಮಲಪ್ಪುರಂ ವೈದ್ಯಕೀಯ ಕಾಲೇಜಿನಲ್ಲಿ ಸೋಂಕಿತರ ‘ಮಾದರಿ’ ಪರೀಕ್ಷೆ ವೇಳೆ ಇಬ್ಬರಲ್ಲಿ ವೈರಾಣು ಇರುವ ಶಂಕೆ ವ್ಯಕ್ತವಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ‘ಮಾದರಿ’ಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿದ್ದು, ಅಲ್ಲಿಂದ ವರದಿ ಬಂದ ನಂತರವೇ ಇದನ್ನು ಖಚಿತಪಡಿಸಲು ಸಾಧ್ಯ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
‘ನಾವು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ‘ನಿಫಾ ಶಿಷ್ಟಾಚಾರ’ವನ್ನು ಜಾರಿಗೊಳಿಸಿದ್ದೇವೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಇಲ್ಲಿ ತುರ್ತು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 26 ವಿಶೇಷ ವೈದ್ಯಕೀಯ ತಂಡಗಳನ್ನು ರಚಿಸಲಾಗಿದೆ. ಸೋಂಕಿತರ ಪತ್ತೆಗಾಗಿ ಪೊಲೀಸ್ ನೆರವನ್ನೂ ಪಡೆದುಕೊಳ್ಳಲಾಗಿದೆ ಈಗಾಗಲೇ ಜಿಲ್ಲಾ ಮತ್ತು ರಾಜ್ಯಮಟ್ಟದ ಸಹಾಯವಾಣಿ ಆರಂಭಿಸಲಾಗಿದೆ ಎಂದು ವೀಣಾ ಜಾರ್ಜ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.