ನವದೆಹಲಿ: 2012 ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ಪರಿಹಾರಾತ್ಮಕ (ಕ್ಯುರೇಟಿವ್) ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠವು, ‘ಮೌಖಿಕ ವಿಚಾರಣೆ ಹಾಗೂ ಗಲ್ಲು ಶಿಕ್ಷೆ ಜಾರಿ ಆದೇಶಕ್ಕೆ ತಡೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ’ ಎಂದು ತಿಳಿಸಿದೆ.
ನ್ಯಾಯಮೂರ್ತಿಗಳಾದ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್.ಬೋಪಣ್ಣ ನೇತೃತ್ವದ ನ್ಯಾಯಪೀಠ ಕಳೆದ ಜನವರಿಯಲ್ಲಿ ಆರೋಪಿಯ ಮನವಿಯನ್ನು ವಜಾಗೊಳಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪವನ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ಮಾರ್ಚ್ 04ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಿರಸ್ಕರಿಸಿದ್ದರು. ಬಳಿಕ ಆರೋಪಿಗಳು ಸುಪ್ರೀ ಕೋರ್ಟ್ ತೀರ್ಪು ಪ್ರಶ್ನಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಿದ್ದರು. ಆದರೆ, ಆಯೋಗ ಅರ್ಜಿಯನ್ನು ತಿರಸ್ಕರಿಸಿತ್ತು.
ಪ್ರಕರಣ ಸಂಬಂಧ ಮಾರ್ಚ್ 5ರಂದು ಪ್ರಕಟಗೊಂಡ ತೀರ್ಪಿನ ಪ್ರಕಾರ ನಾಳೆ (ಮಾರ್ಚ್ 20) ಬೆಳಿಗ್ಗೆ 5.30ಕ್ಕೆ ಪವನ್ ಗುಪ್ತಾ (25), ಮುಖೇಶ್ ಕುಮಾರ್ ಸಿಂಗ್ (32), ವಿನಯ್ (26), ಅಕ್ಷಯ್ (31) ಅಪರಾಧಿಗಳನ್ನುಗಲ್ಲಿಗೇರಿಸಲಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.