ನವದೆಹಲಿ: ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್ ಅವರು ನ್ಯಾಯಾಲಯವನ್ನು ಹಾದಿ ತಪ್ಪಿಸುವ ಮೂಲಕ ನ್ಯಾಯಾದಾನ ಪ್ರಕ್ರಿಯೆ ವಿಳಂಬವಾಗುವಂತೆ ಮಾಡುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಶಾದೇವಿ ಬೇಸರ ವ್ಯಕ್ತಪಡಿಸಿದ್ದಾರೆ.
‘ಅಪರಾಧಿಗಳ ವಕೀಲರ ಬಳಿ ಏನೂ ಇಲ್ಲ. ನ್ಯಾಯ ವಿಳಂಬ ಮಾಡುವುದಕ್ಕಾಗಿ ಅವರು ನ್ಯಾಯಾಲಯವನ್ನು ಹಾದಿತಪ್ಪಿಸುತ್ತಿದ್ದಾರೆ. ವಿನಯ್ ಸಿಂಗ್ಗೆ ಅಲ್ಲ, ವಕೀಲರಿಗೆ ವಿಶ್ರಾಂತಿ ಬೇಕಿರುವುದು. ವಿನಯ್ ಮಾನಸಿಕವಾಗಿ ಸಂಪೂರ್ಣವಾಗಿ ಸ್ಥಿರವಾಗಿದ್ದಾನೆ’ ಎಂದು ಅವರು ಎಎನ್ಐ ಸುದ್ದಿಸಂಸ್ಥೆ ಬಳಿ ಹೇಳಿದ್ದಾರೆ.
ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಾರ್ಚ್ 3ರ ಬೆಳಿಗ್ಗೆ ಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ಪಟಿಯಾಲಹೌಸ್ ನ್ಯಾಯಾಲಯ ಹೊಸದಾಗಿ ವಾರೆಂಟ್ ಜಾರಿಮಾಡಿತ್ತು. ಅದರ ಬೆನ್ನಲ್ಲೇ ಅಪರಾಧಿಗಳಲ್ಲೊಬ್ಬನಾದ ವಿನಯ್ ಶರ್ಮಾ, ಜೈಲಿನ ಗೋಡೆಗೆ ತಲೆಯನ್ನು ಚಚ್ಚಿಕೊಂಡಿದ್ದ. ಈ ಮಧ್ಯೆ, ಅಪರಾಧಿ ವಿನಯ್ ಮಾನಸಿಕವಾಗಿ ಅಸ್ವಸ್ಥನಾಗಿದ್ದು, ಈ ಬಗ್ಗೆ ತಿಹಾರ್ ಜೈಲು ಪ್ರಾಧಿಕಾರದಿಂದ ವರದಿಯನ್ನು ತರಿಸಿಕೊಳ್ಳಬಹುದು. ಅಕ್ಷಯ್ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿ ವಜಾ ಆಗಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಲು ಆತ ಬಯಸಿದ್ದಾನೆ ಎಂದು ಆತನ ಪರ ವಕೀಲ ಎ.ಪಿ.ಸಿಂಗ್ ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.