ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ‘ನನ್ನ ತೆರಿಗೆ ನನ್ನ ಹಕ್ಕು–ಚಲೋ ದಿಲ್ಲಿ’ ಹೆಸರಿನಲ್ಲಿ ಜಂತರ್ಮಂತರ್ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಕಾಂಗ್ರೆಸ್ನ ಬಹುತೇಕ ಶಾಸಕರು ಧರಣಿಯಲ್ಲಿ ಭಾಗವಹಿಸಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ತೆರಿಗೆದಾರರ ಹಣವನ್ನು ಬಳಸಿಕೊಂಡಿರುವ ಕರ್ನಾಟಕ ಸರ್ಕಾರವು ಪತ್ರಿಕೆಗಳಲ್ಲಿ ಪೂರ್ಣ ಪುಟದ ಜಾಹೀರಾತುಗಳನ್ನು ನೀಡಿದೆ. ಕಾಂಗ್ರೆಸ್ ಮಾಡಿರುವ ಆರು ಆರೋಪಗಳಲ್ಲಿ ಎರಡು ಅತಿರೇಕದ ಸುಳ್ಳುಗಳಿವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೊದಲ ಸುಳ್ಳು... ಜಾಹೀರಾತಿನಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲ ಎಂದು ಹೇಳಲಾಗಿದೆ. ಆದರೆ, ವಿಪತ್ತು ನಿರ್ವಹಣೆ ಮತ್ತು ಬಂಡವಾಳ ಹೂಡಿಕೆ ಎರಡನ್ನೂ ಸೇರಿಸಿ ಒಟ್ಟು ₹12,476 ಕೋಟಿ ನೀಡಲಾಗಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.
ಎರಡನೇ ಸುಳ್ಳು... ಕೇಂದ್ರ ಸರ್ಕಾರ ವಿಶೇಷ ಅನುದಾನ ನೀಡಿಲ್ಲ ಎಂದು ಹೇಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಹಣಕಾಸು ಆಯೋಗದ ಶಿಫಾರಸ್ಸನ್ನು ಉಲ್ಲೇಖಿಸಲಾಗಿದೆ. ಆದರೆ, ವಾಸ್ತವಕ್ಕೆ ದೂರವಾಗಿದೆ. ವಿಶೇಷ ಅನುದಾನಕ್ಕೆ ಸಂಬಂಧಿಸಿ ಹಣಕಾಸು ಆಯೋಗ ಯಾವುದೇ ಶಿಫಾರಸ್ಸು ಮಾಡಿಲ್ಲ ಎಂದು ನಿರ್ಮಲಾ ಹೇಳಿದ್ದಾರೆ.
ಕಾಂಗ್ರೆಸ್ ಮಾಡಿರುವ ಆರೋಪಗಳೆಲ್ಲವೂ ಕೇವಲ ಒಂದೇ ಮನಸ್ಥಿತಿಯಿಂದ ಹುಟ್ಟಿಕೊಂಡಿವೆ ಎಂದು ಹೇಳಲು ಬಯಸುತ್ತೇನೆ. ಕಾಂಗ್ರೆಸ್ಸಿಗರು ಪ್ರತ್ಯೇಕತಾವಾದದ ಮನಸ್ಥಿತಿಯನ್ನು ಹೊಂದಿದ್ದಾರೆ. ಅದರಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ, ಸಂಸದ ಡಿ.ಕೆ.ಸುರೇಶ್ ನೀಡಿರುವ ಪ್ರತ್ಯೇಕ ರಾಷ್ಟ್ರದ ಹೇಳಿಕೆಯೇ ಸಾಕ್ಷಿ’ ಎಂದು ನಿರ್ಮಲಾ ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.