ADVERTISEMENT

ಮಹಿಳೆಯರಿಗೆ ಶಿಕ್ಷಣ ನೀಡುವುದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ: ನಿತೀಶ್‌ ಕುಮಾರ್‌

ಪಿಟಿಐ
Published 11 ಆಗಸ್ಟ್ 2021, 1:41 IST
Last Updated 11 ಆಗಸ್ಟ್ 2021, 1:41 IST
ಬಿಹಾರ ಸಿಎಂ ನಿತೀಶ್‌ ಕುಮಾರ್‌
ಬಿಹಾರ ಸಿಎಂ ನಿತೀಶ್‌ ಕುಮಾರ್‌   

ಪಾಟ್ನಾ: ಮಹಿಳೆಯರಿಗೆ ಶಿಕ್ಷಣ ನೀಡುವುದರಿಂದ ಮತ್ತು ಮಹಿಳೆಯರ ಸಬಲೀಕರಣದಿಂದ ಜನಸಂಖ್ಯಾ ಸ್ಪೋಟವನ್ನು ನಿಯಂತ್ರಿಸಬಹುದು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಅಸ್ಸಾಂನಂತಹ ಬಿಜೆಪಿ ನೇತೃತ್ವದ ರಾಜ್ಯಗಳಲ್ಲಿ ಈಗಾಗಲೇ ಜನಸಂಖ್ಯಾ ನಿಯಂತ್ರಣದ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ, ಅವರನ್ನು ಸರ್ಕಾರಿ ಸೌಲಭ್ಯಗಳಿಂದ ದೂರವಿರಿಸುವ ಕ್ರಮಗಳನ್ನು ಹೇರಲಾಗಿದೆ.

ಪ್ರೌಢ ಶಿಕ್ಷಣ ಪಡೆದ ಅಥವಾ ಉನ್ನತ ಶಿಕ್ಷಣ ಪಡೆದ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಶಿಕ್ಷಣವನ್ನು ಪಡೆದ ಮಹಿಳೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಬಲೆ ಎಂಬುದನ್ನು ಅರಿತುಕೊಳ್ಳುತ್ತಾಳೆ. ನಮ್ಮ ಅಧ್ಯಯನದ ಪ್ರಕಾರ ಹೈಸ್ಕೂಲ್‌ಗಿಂತ ಹೆಚ್ಚು ಓದಿರುವ ಪತ್ನಿ ಇರುವ ಸಂಸಾರವು ಆರೋಗ್ಯಕರವಾಗಿದೆ. ಹಾಗಾಗಿ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದು ನಮ್ಮ ಧ್ಯೇಯವಾಗಿದೆ. ಬೇರೆ ರಾಜ್ಯಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳಿಂದ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂಬುದರ ಮೇಲೆ ವಿಶ್ವಾಸವಿಲ್ಲ ಎಂದು ನಿತೀಶ್‌ ಕುಮಾರ್‌ ಹೇಳಿದ್ದಾರೆ.

ADVERTISEMENT

ಬಿಹಾರದಲ್ಲಿ ಕರುಣಾಕರನ್‌ ಸಮಿತಿಯ ವರದಿಯನ್ನು ಅನುಷ್ಠಾನಕ್ಕೆ ತರಬೇಕು ಎಂಬ ಕೂಗು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಿತೀಶ್‌ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಕಾನೂನನ್ನು ಬಿಹಾರದಲ್ಲಿ ಅನುಷ್ಠಾನಕ್ಕೆ ತರಲು ನಿತೀಶ್‌ ಸಿದ್ಧರಿಲ್ಲ ಎಂಬುದನ್ನು ಪರೋಕ್ಷವಾಗಿ ಪ್ರಸ್ತುತ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.