ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನೀತಿ ಆಯೋಗದ ಆಡಳಿತ ಮಂಡಳಿಯ ಸಭೆಯಲ್ಲಿಈ ಬಾರಿಯೂ ಪಾಲ್ಗೊಳ್ಳುತ್ತಿಲ್ಲ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಅವರು ಕೂಡಾ ಸಭೆಯನ್ನು ಬಹಿಷ್ಕರಿಸುವುದಾಗಿ ಶನಿವಾರ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ಏಳನೇ ಸಭೆಯು ಭಾನುವಾರ ನಡೆಯಲಿದೆ.
ನಿತೀಶ್ ಅವರು ಈಗಷ್ಟೇ ಕೋವಿಡ್ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರು ಸಭೆಗೆ ಹಾಜರಾಗುತ್ತಿಲ್ಲ. ಮುಖ್ಯಮಂತ್ರಿಗಳು ಮಾತ್ರ ಈ ಸಭೆಯಲ್ಲಿ ಭಾಗವಹಿಸಲು ಅವಕಾಶ ಇರುವ ಕಾರಣ ಬಿಹಾರದ ಜೆಡಿಯು–ಬಿಜೆಪಿ ಮೈತ್ರಿ ಸರ್ಕಾರದ ಪ್ರತಿನಿಧಿಯಾಗಿ ಯಾರೂ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷದ ಸಭೆಯಲ್ಲೂ ನಿತೀಶ್ ಅವರು ಭಾಗಿಯಾಗಿರಲಿಲ್ಲ.
ಸಭೆ ಬಹಿಷ್ಕರಿಸಿದ ಕೆಸಿಆರ್: ಕೇಂದ್ರ ಸರ್ಕಾರದ ಕೆಲ ಧೋರಣೆಗಳ ವಿರುದ್ಧ ಪ್ರತಿಭಟನಾ ಸೂಚಕವಾಗಿ ಸಭೆಯನ್ನು ಬಹಿಷ್ಕರಿಸುವುದಾಗಿ ಚಂದ್ರಶೇಖರ್ ರಾವ್ ಅವರು ತಿಳಿಸಿದ್ದಾರೆ. ಈ ಕುರಿತು ಅವರು ಮೋದಿ ಅವರಿಗೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ.
ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರವು ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ರಾವ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.