ನವದೆಹಲಿ: ‘ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಬುಧವಾರ ಮಾಹಿತಿ ನೀಡಿದೆ.
ದೇಶದಾದ್ಯಂತ ಎನ್ಆರ್ಸಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಯಾವುದಾದರೂ ಯೋಜನೆ ಹೊಂದಿದೆಯೇ ಎಂಬ ಬಗ್ಗೆ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ‘ಈವರೆಗೆ ದೇಶದಾದ್ಯಂತ ಎನ್ಆರ್ಸಿಯನ್ನು ಸಿದ್ಧಪಡಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ’ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ರೈ, ಪೌರತ್ವ ಕಾಯ್ದೆ 1955 ಮತ್ತು ಎನ್ಆರ್ಸಿ ಅಡಿಯಲ್ಲಿ ಬಂಧನ ಕೇಂದ್ರಗಳನ್ನು ಒದಗಿಸಲು ಅವಕಾಶವಿಲ್ಲ ಎಂದೂ ಅವರು ಹೇಳಿದ್ದಾರೆ.
‘ಈಗಾಗಲೇ ಶಿಕ್ಷೆಯನ್ನು ಪೂರ್ಣಗೊಳಿಸಿರುವ ವಿದೇಶಿ ಪ್ರಜೆಗಳನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕು. ಅವರ ಗಡಿಪಾರು ಅಥವಾ ವಾಪಸಾತಿಗೆ ಬಾಕಿ ಇರುವಂಥವರನ್ನು ಸೂಕ್ತ ಸ್ಥಳದಲ್ಲಿರಿಸಬೇಕು ಎಂದು 2012ರ ಫೆ. 28ರಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ’ ಎಂದೂ ಅವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.