ಶ್ರೀನಗರ: ಜಮ್ಮ ಮತ್ತು ಕಾಶ್ಮೀರ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಈ ವರ್ಷ ಉಗ್ರರ ಒಳನುಸುಳುವಿಕೆ ನಡೆದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ದಿಲ್ಭಾಗ್ ಸಿಂಗ್ ಶನಿವಾರ ಹೇಳಿದ್ದಾರೆ.
‘ಭಾರತ ಮತ್ತು ಪಾಕಿಸ್ತಾನದ ಅಧಿಕಾರಿಗಳ ನಡುವೆ ಈಚೆಗೆ ನಡೆದ ಶಾಂತಿ ಒಪ್ಪಂದದ ಬಳಿಕ ಕದನವಿರಾಮ ಉಲ್ಲಂಘನೆಯ ಪ್ರಕರಣಗಳೂ ವರದಿಯಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.
‘ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಮಾದಕವಸ್ತುಗಳ ಸಾಗಣೆ ಹೆಚ್ಚಿದೆ. ಕಳೆದ ವರ್ಷ ಭಾರಿ ಪ್ರಮಾಣದಲ್ಲಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿತ್ತು. ಇದರ ವಿರುದ್ಧ ಕಾರ್ಯಾಚರಣೆಗಾಗಿ ಮಾದಕ ವಸ್ತು ನಿಗ್ರಹ ಕಾರ್ಯಪಡೆಯನ್ನು (ಎಎನ್ಟಿಎಫ್) ರಚಿಸಲಾಗಿದ್ದು, ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದಿದ್ದಾರೆ.
‘ಮಾದಕ ವಸ್ತುಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲುಕಳೆದ ವರ್ಷ ಉಗ್ರರು ಡ್ರೋನ್ಗಳನ್ನು ಬಳಸಿದ್ದರು. ಈ ರೀತಿ ಸಾಗಣೆ ನಡೆಸಿದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದೂ ಹೇಳಿದ್ದಾರೆ.
ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದ ಹಲವು ಯುವಕರನ್ನು ಕಳೆದ ವರ್ಷ ಮರಳಿ ಕರೆತರಲಾಗಿತ್ತು. ಮತ್ತು 12 ಮಂದಿ ಶರಣಾಗತರಾಗಿದ್ದರು ಎಂದೂ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.