ದೆಹಲಿ: ಬಹುಜನ ಸಮಾಜ ಪಕ್ಷದ ವರಿಷ್ಠರಾದ ಮಾಯಾವತಿ ವಿಪಕ್ಷ ನಾಯಕರೊಂದಿಗೆ ಸೋಮವಾರಯಾವುದೇ ಸಭೆ ನಡೆಸುತ್ತಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಬಿಎಸ್ಪಿ ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಮಾಯಾವತಿ ಅವರು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಜತೆ ಇಂದು ಸಭೆ ನಡೆಸಲಿದ್ದಾರೆ ಎನ್ನಲಾಗಿತ್ತು. ಈ ಸಂಗತಿ ಭಾನುವಾರ ರಾಷ್ಟ್ರ ರಾಜಕಾರಣದಲ್ಲಿ ಸಂಚಲನಕ್ಕೂ ಕಾರಣವಾಗಿತ್ತು. ಆದರೆ, ಇದೀಗ ಬಿಎಸ್ಪಿಯೇ ಸಂಭಾವ್ಯ ಭೇಟಿಯನ್ನು ಅಲ್ಲಗೆಳೆದಿದೆ.
ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ಜತೆ ಮಾತನಾಡಿರುವ ಬಿಎಸ್ಪಿಯ ಹಿರಿಯ ನಾಯಕ ಸತೀಶ್ ಚಂದ್ರ ಮಿಶ್ರಾ, ‘ಮಾಯಾವತಿ ಅವರು ಸೋಮವಾರ ದೆಹಲಿಯಲ್ಲಿ ಯಾವುದೇ ಸಭೆ, ಸಮಾರಂಭದ ವೇಳಾಪಟ್ಟಿಯನ್ನು ಹೊಂದಿಲ್ಲ,’ಎಂದು ಹೇಳಿದ್ದಾರೆ.
ಅತಂತ್ರ ಲೋಕಸಭೆಯ ಸನ್ನಿವೇಶವೇನಾದರೂ ಸೃಷ್ಟಿಯಾದರೆ ಮುಂದೇನು ಮಾಡಬೇಕು ಎಂಬುದರ ಕುರಿತು ಚರ್ಚಿಸಲು ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಬಿಎಸ್ಪಿ ನಾಯಕಿ ಮಾಯಾವತಿ ಭೇಟಿಯಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದಕ್ಕೂ ಹಿಂದೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಮಾಯಾವತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.