ನವದೆಹಲಿ: ಕಾಂಗ್ರೆಸ್ ಇಲ್ಲದೆ ವಿರೋಧಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಹೇಳಿದ್ದಾರೆ.
ಒಂದು ವೇಳೆ 2024ರ ಸಾರ್ವತ್ರಿಕ ಚುನಾವಣೆಗೆ ವಿರೋಧಪಕ್ಷಗಳ ಮೈತ್ರಿಕೂಟ ರಚನೆಯಾದರೆ, ಪಕ್ಷವು ಅದರಲ್ಲಿ ಪ್ರಧಾನ ಪಾತ್ರವಹಿಸಲಿದೆ ಎಂದೂ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.
‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಈ ವರ್ಷ ನಡೆಯಲಿರುವ ಚುನಾವಣೆಗಳಿಗೆ ಪಕ್ಷವು ಸದ್ಯ ಮೊದಲ ಆದ್ಯತೆ ನೀಡಲಿದೆ’ ಎಂದೂ ಹೇಳಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಿಂದ ದೂರವಿರುವುದಾಗಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮತ್ತು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು (ಎಸ್ಪಿ) ಹೇಳಿರುವುದಕ್ಕೆ ಜೈರಾಂ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
2024ರ ಸಾರ್ವತ್ರಿಕ ಚುನಾವಣೆಯ ಪೂರ್ವಭಾವಿಯಾಗಿ ವಿವಿಧ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾತುಕತೆ ನಡೆಸುವ ಆಶಯವನ್ನು ಟಿಎಂಸಿ ಮತ್ತು ಎಸ್ಪಿ ವ್ಯಕ್ತಪಡಿಸಿದ್ದವು.
ಟಿಎಂಸಿ ಮತ್ತು ಎಸ್ಪಿಯ ನಡೆಯು ವಿರೋಧಪಕ್ಷಗಳ ಒಗ್ಗಟ್ಟಿಗೆ ಧಕ್ಕೆ ತರಲಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೈರಾಂ ಅವರು, ‘ಟಿಎಂಸಿ ಮತ್ತು ಎಸ್ಪಿ ನಾಯಕರು ಸಭೆಗಳನ್ನು ನಡೆಸುತ್ತಿದ್ದಾರೆ. ತೃತೀಯ ರಂಗ, ನಾಲ್ಕನೇ ರಂಗ ರಚನೆಯಾಗುತ್ತಲೇ ಇರುತ್ತದೆ ಆದರೆ ವಿರೋಧ ಪಕ್ಷದಲ್ಲಿ ಕಾಂಗ್ರೆಸ್ ಇರುವುದು ಅತ್ಯಗತ್ಯ’ ಎಂದಿದ್ದಾರೆ.
‘2024ರ ಚುನಾವಣೆಗಾಗಿ ವಿವಿಧ ಪಕ್ಷಗಳೊಂದಿಗೆ ಮಾತುಕತೆ ನಡೆಸುವ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಪ್ರವೃತ್ತರಾಗಿದ್ದಾರೆ’ ಎಂದೂ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.