ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ಟೋಬರ್ 25 ರಿಂದ ಪಿಯುಸಿ ಪ್ರಮಾಣ ಇಲ್ಲದವರಿಗೆ ಪೆಟ್ರೋಲ್ ಪಂಪ್ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನೀಡದೇ ಇರಲು ಎಎಪಿ ಸರ್ಕಾರ ನಿರ್ಧರಿಸಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಶನಿವಾರ ಹೇಳಿದ್ದಾರೆ.
ವಾಹನ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ. ಅಂದಹಾಗೆ ಪಿಯುಸಿ ಎಂದರೆ ‘ಪೊಲ್ಯುಷನ್ ಅಂಡರ್ ಕಂಟ್ರೋಲ್’ ಅಂದರೆ, ವಾಹನದ ‘ಮಾಲಿನ್ಯ ನಿಯಂತ್ರಣದಲ್ಲಿದೆ’ ಎಂಬುದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವಾಗಿದೆ.
ಇದಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನೂ ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
‘ನಿಯಮದ ಅನುಷ್ಠಾನ ಮತ್ತು ಕಾರ್ಯವಿಧಾನಗಳ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 29 ರಂದು ಕರೆಯಲಾಗಿದ್ದ ಪರಿಸರ, ಸಾರಿಗೆ ಮತ್ತು ಸಂಚಾರ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಅದರಂತೆ ಅಕ್ಟೋಬರ್ 25 ರಿಂದ ನಿಯಮ ಜಾರಿಗೆ ಬರಲಿದೆ’ ಎಂದರು.
‘ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯಕ್ಕೆ ವಾಹನಗಳ ಹೊಗೆ ಪ್ರಮುಖ ಕಾರಣವಾಗಿದೆ. ಅದನ್ನು ಕಡಿಮೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅಕ್ಟೋಬರ್ 25 ರಿಂದ ವಾಹನಕ್ಕೆ ಪಿಯುಸಿ ಪ್ರಮಾಣಪತ್ರವಿಲ್ಲದಿದ್ದರೆ ಪೆಟ್ರೋಲ್ ಪಂಪ್ಗಳಲ್ಲಿ ಪೆಟ್ರೋಲ್, ಡೀಸೆಲ್ ನೀಡದಿರಲು ನಿರ್ಧರಿಸಲಾಗಿದೆ’ ಎಂದು ರೈ ತಿಳಿಸಿದರು.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.